

ಬೆಂಗಳೂರು: ಸಚಿವ ಖಾತೆಗಳ ಹಂಚಿಕೆ ಕುರಿತ ಆರಂಭಿಕ ಅಸಮಾಧಾನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಸಮಾಧಾನಪಡಿಸಲು ಯತ್ನಿಸುತ್ತಿರುವಾಗಲೇ, ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆಯಲು ಬಯಸುತ್ತಿರುವ ಶಾಸಕರು ಒತ್ತಡದ ತಂತ್ರಗಳನ್ನು ಬಳಸಲು ಆರಂಭಿಸಿದ್ದಾರೆ.
ಮಾಜಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಬೆಂಬಲಿಗರು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಪ್ರತಿಭಟನಾಕಾರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದರು. ಚಿತ್ರದುರ್ಗ ಹಾಗೂ ರಾಯಚೂರು ಸೇರಿದಂತೆ ಹಲವು ಕಡೆಗಳಲ್ಲೂ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಇತ್ತೀಚಿನ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಜಮೀರ್ ಅವರ ಕೊಡುಗೆ ಇದ್ದರೂ ಪಕ್ಷದ ಹೈಕಮಾಂಡ್ ಅವರಿಗೆ ಅನ್ಯಾಯ ಮಾಡಿದೆ ಎಂದು ಅವರು ಆರೋಪಿಸಿದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಜಮೀರ್ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ ಎನ್ನಲಾಗಿದೆ. ಜೊತೆಗೆ, ಮತದಾರರು ಎಸ್ಡಿಪಿಐ ಅಥವಾ ಪಕ್ಷೇತರ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದು ಅವರು ಹೇಳಿರುವಂತೆ ಕೇಳಿಬಂದ ಆಡಿಯೊ ಕ್ಲಿಪ್ ವೈರಲ್ ಆಗಿತ್ತು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆಯಲು ಜಮೀರ್ ಅವರು ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಮೂರು ಬಾರಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಆದರೆ ಈ ಪ್ರತಿಭಟನೆ ಸ್ವಯಂಪ್ರೇರಿತವಾಗಿತ್ತು ಎಂದು ಅಬ್ಬಯ್ಯ ಪ್ರಸಾದ್ ಸ್ಪಷ್ಟಪಡಿಸಿದರು.
ಮಾಜಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಣಿ ಹಾಗೂ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಕೂಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.
ಇದೇ ವೇಳೆ, ಬಳ್ಳಾರಿ ಸಂಸದ ಇ ತುಕಾರಾಮ್ ಅವರು ತಮ್ಮ ಪತ್ನಿ ಹಾಗೂ ಸಂಡೂರು (ಎಸ್ಟಿ) ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಮ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ಶಿವರಾಜ್ ತಂಗಡಗಿ ಅಶೋಕ್ ಪಟ್ಟಣ, ಅಪ್ಪಾಜಿ ಸಿ ಎಸ್ ನಾಡಗೌಡ, ಎಸ್ ಎನ್ ನಾರಾಯಣಸ್ವಾಮಿ, ಎ ಆರ್ ಕೃಷ್ಣಮೂರ್ತಿ ಹಾಗೂ ಪಿ ಎಂ ನರೇಂದ್ರಸ್ವಾಮಿ ಸೇರಿದಂತೆ ಹಲವರು ಸಚಿವ ಸ್ಥಾನಕ್ಕಾಗಿ ಬಲವಾದ ಲಾಬಿ ನಡೆಸುತ್ತಿದ್ದಾರೆ.
ಜೂನ್ 18ರಂದು ನಡೆಯಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳು ಮತ್ತು ಏಳು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Advertisement