ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ 'Power game': ಸಮುದಾಯಗಳ ಮೂಲಕ ಶಕ್ತಿ ಪ್ರದರ್ಶನ, ಹೈಕಮಾಂಡ್‌ ಮೇಲೆ ನಾಯಕರ ಒತ್ತಡ..!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಹಿರಿಯ ನಾಯಕ ಹೆಚ್.ಸಿ.ಮಹದೇವಪ್ಪ ಅವರ ಬೆಂಬಲಿಗರು ಸಮುದಾಯದ ಹೆಸರಿನಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಹೈಕಮಾಂಡ್‌ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
Protest
ಬೆಂಬಲಿಗರ ಪ್ರತಿಭಟನೆ
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಪಕ್ಷದ ವಿವಿಧ ಬಣಗಳಿಗೆ ಸೇರಿದ ನಾಯಕರು ಹೈಕಮಾಂಡ್‌ ಗಮನ ಸೆಳೆಯಲು ವಿಭಿನ್ನ ತಂತ್ರಗಳನ್ನು ಅನುಸರಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಹಿರಿಯ ನಾಯಕ ಹೆಚ್.ಸಿ.ಮಹದೇವಪ್ಪ ಅವರ ಬೆಂಬಲಿಗರು ಸಮುದಾಯದ ಹೆಸರಿನಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಹೈಕಮಾಂಡ್‌ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಮಹದೇವಪ್ಪ ಬೆಂಬಲಿಗರು ‘ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ’ದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಧಾರ್ಮಿಕ ಮುಖಂಡ ಜ್ಞಾನಪ್ರಕಾಶ ಸ್ವಾಮೀಜಿ, “ಮಹದೇವಪ್ಪ ನಿಜವಾದ ಅಂಬೇಡ್ಕರ್‌ವಾದಿ. ಅವರಿಗೆ ಸಚಿವ ಸ್ಥಾನ ನೀಡಬೇಕು” ಎಂದು ಆಗ್ರಹಿಸಿದರು.

ಅಲ್ಲದೆ, ದಲಿತ ಮುಖ್ಯಮಂತ್ರಿ ವಿಚಾರವನ್ನು ಪ್ರಸ್ತಾಪಿಸಿದ ಅವರು, “ದಲಿತ ಸಮುದಾಯವನ್ನು ಕಾಂಗ್ರೆಸ್‌ ನಿರ್ಲಕ್ಷಿಸಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಪಕ್ಷಕ್ಕೆ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಜಮೀರ್ ಪರ ಬೆಂಬಲಿಗರ ಒತ್ತಡ

ಇನ್ನೊಂದೆಡೆ, ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದ ಮುಂದೆ ಜಮಾಯಿಸಿ, ಜಮೀರ್‌ಗೆ ಸಚಿವ ಸ್ಥಾನ ದೊರಕುವಂತೆ ಹೈಕಮಾಂಡ್‌ ಮೇಲೆ ಒತ್ತಡ ತರಲು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಜಮೀರ್ ಬೆಂಬಲಿಗರೊಬ್ಬರು ಸಚಿವ ಸ್ಥಾನಕ್ಕಾಗಿ ಮನವಿ ಮಾಡುತ್ತಿದ್ದಾಗ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿರುವುದು ಕಂಡುಬಂದಿದೆ.

“ನನ್ನ ಆಪ್ತ ಎಂದ ಮಾತ್ರಕ್ಕೆ ನನ್ನ ವಿರುದ್ಧ ಕೆಲಸ ಮಾಡಬಹುದೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿರುವುದು ವಿಡಿಯೋದಲ್ಲಿ ಕೇಳಿಬಂದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪವನ್ನೂ ಅವರು ಪ್ರಸ್ತಾಪಿಸಿದರೆಂದು ಹೇಳಲಾಗಿದೆ.

Protest
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ: ಯಂಗ್-ಎನರ್ಜಿಟಿಕ್ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ

ಸಿದ್ದರಾಮಯ್ಯ ಯಾರ ಪರ?

ಪಕ್ಷದ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಮಹದೇವಪ್ಪ ಅಥವಾ ಜಮೀರ್ ಪರವಾಗಿ ಬಲವಾಗಿ ಲಾಬಿ ನಡೆಸುವ ಸಾಧ್ಯತೆ ಕಡಿಮೆಯಿದ್ದು, ಇದರ ಬದಲಾಗಿ ತಮ್ಮ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅಥವಾ ರಾಮದುರ್ಗ ಶಾಸಕ ಅಶೋಕ್ ಎಂ ಪಟ್ಟಣ್ ಅವರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಬಹುದು ಎಂದು ಹೇಳಲಾಗುತ್ತಿದೆ.

ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಈಗಾಗಲೇ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಮಹದೇವಪ್ಪ ಅವರಿಗೆ ಪಕ್ಷ ಸಂಘಟನೆ ಬಲಪಡಿಸುವ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ಲೆಕ್ಕಾಚಾರ

ಇದೇ ವೇಳೆ, ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಕೇರಳ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಕೊಡುಗೆ ಅವರಿಗೆ ಅನುಕೂಲವಾಗಬಹುದು ಎನ್ನಲಾಗುತ್ತಿದೆ.

ಮತ್ತೊಂದೆಡೆ, ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿದ್ದ ಸಚಿವರ ಕಾರ್ಯಕ್ಷಮತೆಯನ್ನು ಕಾಂಗ್ರೆಸ್ ಹೈಕಮಾಂಡ್ ಪರಿಶೀಲಿಸುತ್ತಿದ್ದು, ಅದನ್ನು ಆಧರಿಸಿ ಹೊಸ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.

ಹಿರಿಯ ನಾಯಕರು ಎಚ್ ಕೆ ಪಾಟೀಲ್ ಅಥವಾ ದಿನೇಶ್ ಗುಂಡೂರಾವ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ನೇಮಿಸುವ ಚರ್ಚೆಯೂ ನಡೆದಿದೆ ಎನ್ನಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ಸಂತೋಷ್ ಲಾಡ್ ತಮ್ಮ ಕಾರ್ಯಕ್ಷಮತೆ ಆಧಾರದಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಹಾಗೆಯೇ ಎಂ.ಸಿ. ಸುಧಾಕರ್, ಕೆ. ವೆಂಕಟೇಶ್ ಸೇರಿದಂತೆ ಹಲವರು ತಮ್ಮದೇ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕೋಟಾದಡಿ ಹೊಸ ಮುಖಗಳಿಗೆ ಅವಕಾಶ ನೀಡುವ ಪರವಾಗಿದ್ದು, ವಿಧಾನ ಪರಿಷತ್ ಸದಸ್ಯ ವಸಂತ ಕುಮಾರ್ ಅವರಿಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com