

ಮೈಸೂರು: 1997ರಲ್ಲೇ ಪ್ರಧಾನಮಂತ್ರಿ ಹುದ್ದೆಯನ್ನು ತ್ಯಜಿಸಿದ್ದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ರಾಜ್ಯಸಭೆ ಸ್ಥಾನ ಯಾವುದೇ ದೊಡ್ಡ ವಿಷಯವಲ್ಲ ಎಂದು ಹೊಳೆನರಸೀಪುರ ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ರಾಜ್ಯಸಭೆ ಸದಸ್ಯತ್ವವನ್ನು ಬಯಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನಾಗಲಿ, ನನ್ನ ಕಿರಿಯ ಸಹೋದರ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಾಗಲಿ, ನಮ್ಮ ತಂದೆಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಬಿಜೆಪಿಯನ್ನು ಸಂಪರ್ಕಿಸಿಲ್ಲ ಎಂದು ರೇವಣ್ಣ ಹೇಳಿದರು.
ದೇವೇಗೌಡರಿಗೆ ರಾಜ್ಯಸಭೆ ಸದಸ್ಯತ್ವ ಮುಖ್ಯವಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವುದೇ ಮುಖ್ಯ. ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಈ ವಿಷಯವನ್ನು ಚರ್ಚಿಸುತ್ತಿದ್ದಾರೆ ಎಂದು ಅವರು ಹೇಳಿದರು.
ರಾಜ್ಯಸಭೆ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಒಮ್ಮೆ ದೇವೇಗೌಡರ ಹೆಸರು ಪಟ್ಟಿಯಲ್ಲಿದೆ ಎಂದಿದ್ದರು. ನಂತರ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ನಮ್ಮಲ್ಲಿ ಯಾವುದೇ ಗೊಂದಲ ಇರಲಿಲ್ಲ ಎಂದರು.
ಒಕ್ಕಲಿಗ ಮತಬ್ಯಾಂಕ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದಕ್ಕೂ ಒಕ್ಕಲಿಗ ಮತಬ್ಯಾಂಕ್ಗೂ ಯಾವುದೇ ಸಂಬಂಧವಿಲ್ಲ. ಒಕ್ಕಲಿಗರ ಮತಗಳನ್ನು ಜೆಡಿಎಸ್ನಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಒಕ್ಕಲಿಗರ ಮತಗಳು ಕಾಂಗ್ರೆಸ್ಗೆ ಹೋಗಿದ್ದವೆಯೇ? ನಮ್ಮ ಪಕ್ಷಕ್ಕೆ ಈಗಲೂ ಬಲವಾದ ಒಕ್ಕಲಿಗ ಮತಬ್ಯಾಂಕ್ ಇದೆ. ನಮ್ಮ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗಿರುವುದು ನಮಗೆ ಸಂತೋಷದ ವಿಷಯ ಎಂದು ಹೇಳಿದರು.
ಇದೇ ವೇಳೆ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಜೆಡಿಎಸ್ ತೊರೆಯುವುದಿಲ್ಲ ಎಂದು ರೇವಣ್ಣ ಸ್ಪಷ್ಟಪಡಿಸಿದರು. 2028ರ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕುಮಾರಸ್ವಾಮಿ, ನಾನು, ಜಿ.ಟಿ. ದೇವೇಗೌಡ ಹಾಗೂ ಮಾಜಿ ಸಚಿವ ಎಸ್ ಆರ್ ಮಹೇಶ್ ಒಟ್ಟಿಗೆ ಚರ್ಚೆ ನಡೆಸಿದ್ದೇವೆ. ಹೀಗಾಗಿ ಅವರು ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಸಮಸ್ಯೆಗಳು ಬಗೆಹರಿಯುತ್ತಿವೆ ಎಂದು ರೇವಣ್ಣ ಹೇಳಿದರು.
Advertisement