

ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆರ್ಎಸ್ಎಸ್ ಸದಸ್ಯರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್ಎಸ್ಎಸ್ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದರು.
ಆರ್ ಎಸ್ಎಸ್, ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ಒಂದು ರಾಜಕೀಯ ಸಂಸ್ಥೆಯಾಗಿದೆ. ಆರ್ಎಸ್ಎಸ್ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇದೆ. ಯಾವುದೇ ಸಂಘಟನೆ ತನ್ನನ್ನು ತಾನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಗೃಹ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸುತ್ತಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್ಎಸ್ಎಸ್ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್ಎಸ್ಎಸ್ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದರು.
Advertisement