

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ತಿಂಗಳ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ರೋಣ ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಎರಡು ದಿನಗಳ ಪಾದಯಾತ್ರೆಯನ್ನು ಬುಧವಾರ ತುಮಕೂರಿನ ಸಿದ್ದಗಂಗಾ ಮಠದಿಂದ ಆರಂಭಿಸಿದ್ದಾರೆ. ಈ ಪಾದಯಾತ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಕ್ತಾಯಗೊಳ್ಳಲಿದೆ.
ಜಿ.ಎಸ್. ಪಾಟೀಲ್ ಅವರ ಪುತ್ರ ಮಿಥುನ್ ಪಾಟೀಲ್ ಅವರು ಈ ಪಾದಯಾತ್ರೆಯ ನೇತೃತ್ವ ವಹಿಸಿದ್ದು, ಮತದಾರರು, ಅಭಿಮಾನಿಗಳು, ಕಾರ್ಯಕರ್ತರು ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಸೇರಿದಂತೆ ನೂರಾರು ಬೆಂಬಲಿಗರು ಸಚಿವ ಸ್ಥಾನಕ್ಕಾಗಿ ಆಗ್ರಹಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ ಸಮಾಧಿ(ಗದ್ದುಗೆ)ಗೆ ಪ್ರಾರ್ಥನೆ ಸಲ್ಲಿಸಿದ ನಂತರ ಯಾತ್ರೆ ಪ್ರಾರಂಭವಾಯಿತು. ಬೆಂಬಲಿಗರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ಸಿದ್ದಲಿಂಗ ಮಹಾಸ್ವಾಮೀಜಿ ಪಾದಯಾತ್ರೆಗೆ ಚಾಲನೆ ನೀಡಿದರು.
ಹಲವಾರು ಮಠಾಧೀಶರು ಮತ್ತು ಧಾರ್ಮಿಕ ಮುಖಂಡರು ಈ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಮುರುಘಾ ಮಠದ ಮರುಳ ಸಿದ್ದೇಶ್ವರ ಸ್ವಾಮೀಜಿ, ಅಬ್ಬಿಗೆರೆ ಮಠದ ಯಲ್ಲಾಲಿಂಗೇಶ್ವರ ಸ್ವಾಮೀಜಿ ಮತ್ತು ಕುಕನೂರು ಇಟಗಿಯ ಗದುಗೆಪ್ಪ ಶ್ರೀಗಳು ಸಹ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬೆಂಬಲಿಗರು, ಜಿ.ಎಸ್. ಪಾಟೀಲ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ನಾಯಕರನ್ನು ಒತ್ತಾಯಿಸುವ ಫಲಕಗಳು ಮತ್ತು ಬ್ಯಾನರ್ಗಳನ್ನು ಹಿಡಿದಿದ್ದರು.
ನಿನ್ನೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಹೊರಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ, ಪಕ್ಷದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದರು. ಇಂದು ಮತ್ತೊಬ್ಬ ಶಾಸಕನಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಪಾದಯಾತ್ರೆ ಆರಂಭಿಸಿದ್ದಾರೆ.
Advertisement