NDAಗೆ ಹಿನ್ನಡೆ ತಂದ Cross-voting: ರಾಜ್ಯ BJP ನಾಯಕತ್ವದ ವಿರುದ್ಧ ಹೈಕಮಾಂಡ್ ಗರಂ; ವಿಜಯೇಂದ್ರ-ಅಶೋಕ್‌ಗೆ ದೆಹಲಿ ಬುಲಾವ್..!

ವಿಜಯೇಂದ್ರ ಅವರು ಭಾನುವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಗಿರುವ ಹೀನಾಯ ಸೋಲಿನಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
BJP leaders
ಬಿಜೆಪಿ ನಾಯಕರು
Updated on

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಕ್ರಾಸ್‌ ವೋಟಿಂಗ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಜೂನ್ 23ರಂದು ನವದೆಹಲಿಗೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ವಿಜಯೇಂದ್ರ ಅವರು ಭಾನುವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಗಿರುವ ಹೀನಾಯ ಸೋಲಿನಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ಒಟ್ಟು 11 ಶಾಸಕರು ಕ್ರಾಸ್‌ ವೋಟಿಂಗ್‌ ಮಾಡಿರುವ ಪರಿಣಾಮ ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ಗೆ 140 ಶಾಸಕರ ಬೆಂಬಲವಿದ್ದರೂ ಅದರ ಐವರು ಅಭ್ಯರ್ಥಿಗಳು ಒಟ್ಟು 151 ಮತಗಳನ್ನು ಪಡೆದಿದ್ದಾರೆ.

63 ಶಾಸಕರನ್ನು ಹೊಂದಿರುವ ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದ್ದರೂ, ಅದರ ಅಭ್ಯರ್ಥಿಗಳಿಗೆ ಕೇವಲ 56 ಮತಗಳು ಲಭಿಸಿವೆ. ಏಳು ಬಿಜೆಪಿ ಶಾಸಕರ ಮತಗಳು ಕಾಂಗ್ರೆಸ್ ಪರವಾಗಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಜೆಡಿಎಸ್‌ನ ಏಕೈಕ ಅಭ್ಯರ್ಥಿಗೆ ಕೇವಲ 14 ಮತಗಳು ಬಂದಿರುವುದು ಮೈತ್ರಿಕೂಟದಲ್ಲಿ ಅನುಮಾನಕ್ಕೆ ಕಾರಣವಾಗಿದೆ. ಜೆಡಿಎಸ್‌ನ 18 ಶಾಸಕರಲ್ಲಿ ಕನಿಷ್ಠ ನಾಲ್ವರು ಕ್ರಾಸ್‌ ವೋಟಿಂಗ್‌ ಮಾಡಿರಬಹುದು ಎನ್ನಲಾಗುತ್ತಿದೆ. ಆದರೆ, ವಿಜಯೇಂದ್ರ ಮತ್ತು ಅಶೋಕ್ ಅವರು, ಜೆಡಿಎಸ್‌ನ ಇನ್ನಷ್ಟು ಶಾಸಕರು ಸಹ ಪಕ್ಷದ ವಿರುದ್ಧ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದಾರೆ.

BJP leaders
'ಧರ್ಮಸ್ಥಳ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ ಹೇಳ್ತೀನಿ ಪರಿಷತ್ ಚುನಾವಣೆಯಲ್ಲಿ ನಾನು ಅಡ್ಡ ಮತದಾನ ಮಾಡಿಲ್ಲ': ಶಾಸಕ HK ಸುರೇಶ್

ಕ್ರಾಸ್‌ ವೋಟಿಂಗ್‌ ಮತ್ತು ಹಣದ ವ್ಯವಹಾರಗಳ ಬಗ್ಗೆ ಎಲ್ಲ ಮಾಹಿತಿಯನ್ನೂ ಸಂಗ್ರಹಿಸಿದ್ದೇನೆ. ಪಕ್ಷದ ವಿರುದ್ಧ ಮತ ಚಲಾಯಿಸಿರುವವರು ಯಾರು ಎಂಬುದು ಪತ್ತೆಯಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಭವಿಷ್ಯದಲ್ಲಿ ಅವರು ಮತ್ತೆ ಶಾಸಕರಾಗದಂತೆ ನೋಡಿಕೊಳ್ಳುತ್ತೇವೆ" ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಗುರುವಾರ ರಾತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದಾಗಿ ತಿಳಿಸಿದ ಅವರು, "ಅವರೂ ಕೂಡ ಈ ಬೆಳವಣಿಗೆಯಿಂದ ಆಘಾತಕ್ಕೊಳಗಾಗಿದ್ದರು. ಈ ಸಂಚು ರೂಪಿಸಿದವರಿಗೆ ತಕ್ಕ ಉತ್ತರ ನೀಡುವ ಕುರಿತು ಚರ್ಚೆ ನಡೆಸಿದ್ದೇವೆ" ಎಂದು ಹೇಳಿದರು. ಈ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರತ್ತ ಪರೋಕ್ಷವಾಗಿ ಬೆರಳು ತೋರಿಸಿದರು.

BJP leaders
Watch | ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ! ವಿಜಯೇಂದ್ರ, ಕುಮಾರಸ್ವಾಮಿ ಹೇಳಿದ್ದಿಷ್ಟು...

ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಿಬಿನ್ ಮತ್ತು ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದರು.

ವಿಜಯೇಂದ್ರ ಅವರೊಂದಿಗೆ ಸಮಾಲೋಚಿಸಿದ ಬಳಿಕ ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಆದರೆ, ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಕೇವಲ 14 ಮತಗಳಿಗೆ ಸೀಮಿತರಾದರು.

ಇದೀಗ ಕ್ರಾಸ್‌ ವೋಟಿಂಗ್‌ ತನಿಖೆಗೆ ಬಿಜೆಪಿ ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ಸಮಿತಿಯಲ್ಲಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com