

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮೇಲೆ ಆಣೆ ಪ್ರಮಾಣ ಮಾಡಿಸಲು ಬಿಜೆಪಿ ರಾಜ್ಯಾಧ್ಯಕ್ಷರು ಮುಂದಾಗಿದ್ದು, ಇದಕ್ಕಾಗಿ ಈ ವಾರ ಅಥವಾ ಮುಂದಿನ ವಾರ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷ ಕರೆಯಲಾಗುವುದು ಎಂದು ಬಿ ವೈ ವಿಜಯೇಂದ್ರ ಇಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಶಾಸಕರಿಗೆ ವಿಪ್ ಕೂಡ ಜಾರಿ ಮಾಡಲು ಬಿಜೆಪಿ ಮುಂದಾಗಿದೆ.
ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ಇದೀಗ ಬಿಜೆಪಿ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ರಾಜಕಾರಣದಲ್ಲಿ ನಡೆದುಬಿಟ್ಟಿರುವ ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ದಯವಿಟ್ಟು ಬೇಡ ಎಂದು ಮಾಜಿ ಸಚಿವ ಬಿಜೆಪಿ ಹಿರಿಯ ಶಾಸಕ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಈ ಅಪಚಾರ ಮಾಡಿರುವವರು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಪಾಪ ಮಾಡಿದ್ದಾರೆ. ಈಗಾಗಲೇ ಹಲವರು ಧರ್ಮಸ್ಥಳದ ಹಿರಿಮೆಯನ್ನು ಹಾಳು ಮಾಡುವ ಕೆಲಸವನ್ನು ಮಾಡುವುದರಲ್ಲಿ ವಿಕೃತಾನಂದ ಪಡೆದಿದ್ದಾರೆ. ಇಡೀ ನಾಡಿನ ಜನತೆ ನಂಬಿಕೆ ಇಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ, ಒಂದೊಮ್ಮೆ ಅಡ್ಡ ಮತದಾನ ಮಾಡಿದ ವೀರರು ಆಣೆ - ಪ್ರಮಾಣ ಮಾಡಿ ತಾವು ಉಳಿದುಕೊಳ್ಳಲು ತಮ್ಮ ನೈತಿಕ ದಿವಾಳಿತನ ತೋರಿಸಿದರೆ, ಅದರಿಂದ ಅಪಚಾರದ ಪ್ರಮಾಣ ಹೆಚ್ಚಾಗುತ್ತದಷ್ಟೇ. ದಯವಿಟ್ಟು ಸ್ವಾಮಿ ಮಂಜುನಾಥನ ಶ್ರೇಷ್ಠತೆಯನ್ನು ಈ ರೀತಿ ಒರೆ ಹಚ್ಚುವುದು ಯಾವುದೇ ಕಾರಣಕ್ಕೂ ಬೇಡ ಎಂದು ಅವರು ವಿಜಯೇಂದ್ರ ಅವರನ್ನು ಕೇಳಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
Advertisement