SIR ಪ್ರಕ್ರಿಯೆ ಗಂಭೀರವಾಗಿ ತೆಗೆದುಕೊಳ್ಳಿ, ಇಲ್ಲದಿದ್ದರೆ ಟಿಕೆಟ್ ಮರೆತುಬಿಡಿ: 'ಕೈ' ಮುಖಂಡರಿಗೆ ಬಿಕೆ ಹರಿಪ್ರಸಾದ್ ಖಡಕ್ ವಾರ್ನಿಂಗ್

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಜೆಪಿ, ಕಾಂಗ್ರೆಸ್ ಬೆಂಬಲಿಗರ ಹೆಸರುಗಳನ್ನು ವಿಶೇಷವಾಗಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸುತ್ತಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿ ಈ ಪ್ರಯತ್ನ ನಡೆಯುತ್ತಿದೆ.
BK Hariprasad
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್
Updated on

ಮಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ನಾಯಕರು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಈ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದವರಿಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ನಡೆದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ಮತಗಟ್ಟೆಗಳಲ್ಲಿ ಇನ್ನೂ ಬೂತ್ ಲೆವೆಲ್ ಏಜೆಂಟ್‌ಗಳ (BLA) ನೇಮಕ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಮಾಜಿ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಒಂದು ವಾರದೊಳಗೆ ನೇಮಕಾತಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, "ನಿಗದಿತ ಅವಧಿಯಲ್ಲಿ ಬಿಎಲ್‌ಎಗಳ ನೇಮಕ ಆಗದಿದ್ದರೆ ಪಕ್ಷದ ಟಿಕೆಟ್ ನಿರೀಕ್ಷಿಸಬೇಡಿ" ಎಂದು ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಜೆಪಿ, ಕಾಂಗ್ರೆಸ್ ಬೆಂಬಲಿಗರ ಹೆಸರುಗಳನ್ನು ವಿಶೇಷವಾಗಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸುತ್ತಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿ ಈ ಪ್ರಯತ್ನ ನಡೆಯುತ್ತಿದೆ. ಪ್ರಜಾಪ್ರಭುತ್ವವೇ ಭಾರತದ ಆತ್ಮವಾಗಿದ್ದು, ಇಂತಹ ಕ್ರಮಗಳು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿವೆ.

ಕಾಂಗ್ರೆಸ್ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಕಟವಾಗಿ ಗಮನಿಸಬೇಕು. "ನಾವು ಎಚ್ಚರಿಕೆಯಿಂದ ಇರದಿದ್ದರೆ ಪ್ರಜಾಪ್ರಭುತ್ವವೇ ಅಪಾಯಕ್ಕೆ ಸಿಲುಕಬಹುದು ಎಂದು ಹೇಳಿದರು.

BK Hariprasad
ವಿದ್ಯಾರ್ಥಿಗಳು NEET ಪರೀಕ್ಷೆ ತಪ್ಪಿಸಿಕೊಂಡಿದ್ದಕ್ಕೆ ಹರಿಪ್ರಸಾದ್ ವಿಷಾದ: ತಪ್ಪು ಮಾಹಿತಿ ಹರಡದಂತೆ ಬಿಜೆಪಿಗೆ ಎಚ್ಚರಿಕೆ

ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕುವುದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದರೆ, ಯಾವುದೇ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬಾರದು. ವಿಶೇಷವಾಗಿ ಕೊರಗ, ಮಲೆಕುಡಿಯ ಹಾಗೂ ಇತರೆ ಆದಿವಾಸಿ ಸಮುದಾಯದ ಜನರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಈ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಲಾಗಿದೆ. ಆದಿವಾಸಿ ಸಮುದಾಯದವರು ಪಟ್ಟಿಯಿಂದ ಹೊರಗುಳಿದಿರುವುದು ಕಂಡುಬಂದರೆ ವಿಶೇಷ ಅಭಿಯಾನ ನಡೆಸುವುದಾಗಿ ಆಯೋಗ ಭರವಸೆ ನೀಡಿದೆ ಎಂದು ತಿಳಿಸಿದರು.

ಇದೇ ವೇಳೆ ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯ ಕ್ರಾಸ್‌ ವೋಟಿಂಗ್ ಕುರಿತು ಪ್ರತಿಕ್ರಿಯಿಸಿದ ಅವರು, "ಕೆಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಆತ್ಮಸಾಕ್ಷಿಯಂತೆ ಮತ ಚಲಾಯಿಸಿದ್ದಾರೆ" ಎಂದು ವ್ಯಂಗ್ಯವಾಡಿದರು.

ಇನ್ನೊಂದೆಡೆ, ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸುತ್ತಿರುವ ದಕ್ಷಿಣ ಕನ್ನಡದ ಕೆಲವು ಮುಸ್ಲಿಂ ಮುಖಂಡರ ವಿರುದ್ಧ ಆರೋಗ್ಯ ಸಚಿವ ಯುಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದರು.

"ಕಾಂಗ್ರೆಸ್‌ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಸಲಹೆ ನೀಡುವ ಅಗತ್ಯವಿಲ್ಲ. ಹಿರಿಯ ನಾಯಕ ಜಮೀರ್ ಸೇರಿದಂತೆ ಎಲ್ಲ ಮುಸ್ಲಿಂ ನಾಯಕರು ಒಗ್ಗಟ್ಟಾಗಿದ್ದಾರೆ. ಪಕ್ಷ ಮತ್ತು ಮುಖ್ಯಮಂತ್ರಿ ಅಲ್ಪಸಂಖ್ಯಾತ ನಾಯಕರಿಗೆ ಸೂಕ್ತ ಅವಕಾಶಗಳನ್ನು ನೀಡಲಿದ್ದಾರೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com