

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಜಕೀಯ ಚರ್ಚೆಗಳು ಜೋರಾಗಿವೆ.
ಮಾರ್ಚ್ 27ರಂದು ಅಧಿವೇಶನ ಮುಕ್ತಾಯವಾದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರ ಕುರಿತ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಪಕ್ಷದ ಉನ್ನತ ನಾಯಕತ್ವವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆರು ವರ್ಷಗಳ ಕಾಲ ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವುದನ್ನು ಗುರುತಿಸಿ ಶಾಸಕರಿಗೆ ಔತಣ ಕೂಟ ನೀಡಿದ ಡಿಕೆ.ಶಿವಕುಮಾರ್ ಅವರು, ಹೈಕಮಾಂಡ್ ಸೂಚನೆ ನೀಡಿದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ತಿಳಿಸಿದ್ದು, ಈ ಹೇಳಿಕೆ ಕುತೂಹಲವನ್ನು ಮೂಡಿಸಿದೆ.
ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಚರ್ಚೆಗಳು ನಡೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಸಚಿವ ಸಂಪುಟ ಪುನರ್ರಚನೆಗೆ ಉನ್ನತ ನಾಯಕತ್ವದ ಅನುಮತಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದಲ್ಲೇ ಬದಲಾವಣೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಸುಮಾರು 25–30 ಹಿರಿಯ ಕಾಂಗ್ರೆಸ್ ಶಾಸಕರು ಗುರುವಾರ ಸಂಜೆ ಭೋಜನ ಕೂಟದಲ್ಲಿ ಸಭೆ ಸೇರಿ ಸಂಪುಟ ಸ್ಥಾನಕ್ಕಾಗಿ ಹಕ್ಕು ಮಂಡಿಸಲಿದ್ದಾರೆಂದು ತಿಳಿದುಬಂದಿದೆ.
ಮೊದಲ ಬಾರಿಗೆ ಶಾಸಕರಾದವರು ಸಂಪುಟದಲ್ಲಿ ಸೇರ್ಪಡೆಯಾಗವು ಲಾಬಿ ನಡೆಸುತ್ತಿದ್ದಾರೆ. ಅವರಿಗೆ ಸಾಧ್ಯವಾಗುವುದಾದರೆ, 3-4 ಬಾರಿ ಗೆದ್ದಿರುವ ನಮಗೇಕೆ ಹಕ್ಕು ಮಂಡಿಸಲು ಸಾಧ್ಯವಿಲ್ಲ? ನಾವು ಇದನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ತಿಳಿಸುತ್ತೇವೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತೇವೆ ಎಂದು ಬೇಲೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
Advertisement