

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಾವು ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಅದರಂತೆ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು.
ಪ್ರದೀಪ್ ಈಶ್ವರ್ ರ್ಯಾಲಿ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಹುಚ್ಚ…ಹುಚ್ಚ…ಎಂದು ಧಿಕ್ಕಾರ ಕೂಗಿದ್ದು ಚಪ್ಪಲಿ ಮತ್ತು ಪೂರಕೆ ತೋರಿಸಿದ್ದಾರೆ. ಬಿಜೆಪಿ ಕಚೇರಿವರೆಗೆ ಕಾಂಗ್ರೆಸ್ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ಜೊತೆ ಪ್ರದೀಪ್ ಈಶ್ವರ್ ಬಂದಿದ್ದು ಪಕ್ಷದ ಪರ ಘೋಷಣೆಗಳನ್ನು ಕೂಗಿದರು. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಚಪ್ಪಲಿ ಮತ್ತು ಪೂರಕೆ ಪ್ರದರ್ಶಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು ಎಂದು ತಿಳಿದು ಬಂದಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆ ಹಾಗೂ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.
Advertisement