

ಸೇಡಂ: ಕಾಂಗ್ರೆಸ್ ಪಕ್ಷ ನಮ್ಮ ರಾಜ್ಯದಲ್ಲಿ ಇರುವ ತನಕ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿ ನಿತ್ಯ ಕುರ್ಚಿಗಾಗಿ ಜಗಳ ನಡೆಸುವವರಿಂದ ರಾಜ್ಯದ ಹಿತ ಕಾಯಲು ಸಾಧ್ಯವೇ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾಮರಸ್ವಾಮಿ ಹೇಳಿದ್ದಾರೆ,
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಹಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನಾಯಕರು ಆಂತರಿಕ ಕಚ್ಚಾಟದಲ್ಲಿ ತೊಡಗಿಕೊಂಡಿದ್ದಾರೆ. ಮೂರು ವರ್ಷ ಕಾಲ ಕಳೆದಿದ್ದಾರೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ, ಇಷ್ಟು ಜನ ಶಾಸಕರನ್ನು ಕೊಟ್ಟ ಮೇಲೆ ಇನ್ನೇನು ಕೊಡಲು ಸಾಧ್ಯ, ಅವರಿಂದ ಅಭಿವೃದ್ಧಿ ಶೂನ್ಯ ಎಂದಿದ್ದಾರೆ.
ಬರಗಾಲ ಹಾಗೂ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮರ್ಪಕ ಪರಿಹಾರ ನೀಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳ ಪರಿಹಾರಕ್ಕಿಂತ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. 2002ರಲ್ಲಿ ಡಾ. ನಂಜುಂಡಪ್ಪ ನೀಡಿದ ಅತಿ ಹಿಂದುಳಿದ ಪ್ರದೇಶಗಳ ವರದಿ ಬಳಿಕವೂ ಪರಿಸ್ಥಿತಿ ಬದಲಾಗಿಲ್ಲ.
ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಸೇಡಂ, ಆಳಂದ ಹಾಗೂ ಅಫಜಲಪುರ ಕ್ಷೇತ್ರಗಳು ಇನ್ನೂ ಮೂಲಸೌಕರ್ಯ ಕೊರತೆಯಿಂದ ಬಳಲುತ್ತಿವೆ ಎಂದು ಹೇಳಿದರು. ಕೆಕೆಆರ್ಡಿಬಿ ಮೂಲಕ ಸಾವಿರಾರು ಕೋಟಿ ರೂ. ಅನುದಾನ ಬಂದರೂ ಅದು ರಸ್ತೆ ಮತ್ತು ಕಟ್ಟಡ ಕಾಮಗಾರಿಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖದ ಸಂಗತಿ. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದರು.
ಇನ್ನೂ 2028 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಮಾತನಾಡಿದ ನಿಖಿಲ್, ಜೆಡಿಎಸ್ ನಲ್ಲಿ ಪದೇ ಪದೇ ಕ್ಷೇತ್ರ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ, ಈ ನಿಯಮ ನಿಖಿಲ್ ಕುಮಾರಸ್ವಾಮಿಗೂ ಅನ್ವಯಿಸುತ್ತದೆ, ಬಾಲರಾಜ್ ಗುತ್ತೇದಾರ್ ಅವರಿಗೂ ಅನ್ವಯಿಸುತ್ತದೆ ಎಂದು ಹೇಳಿದರು.
Advertisement