

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ ಸಂಪೂರ್ಣ ಪ್ರಕ್ರಿಯೆ ಇಂದು ಮುಗಿಸಿದೆವು ಎಂದು ಜಿಲ್ಲಾ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳನ್ನು ಅಕ್ರಮ ಮಾಡುವಿಕೆ ಆರೋಪದ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಯಿತು ಎಂದರು.
ಮರು ಎಣಿಕೆಯ ನಂತರ ಅಭ್ಯರ್ಥಿಗಳ ಮತಗಳಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. 2023 ರ ಮತ ಎಣಿಕೆಯಲ್ಲಿ ಮೇಲ್ಮನವಿದಾರ ಡಿ ಎನ್ ಜೀವರಾಜ್ ಅವರಿಗೆ 692 ಮತಗಳು ಬಂದಿದ್ದರೆ, ಮರು ಎಣಿಕೆಯ ನಂತರ ಅದು 690 ಕ್ಕೆ ಇಳಿದಿದೆ.
ಟಿ ಡಿ ರಾಜೇಗೌಡರಿಗೆ ಮೂಲತಃ 569 ಮತಗಳು ಬಂದಿದ್ದವು. ಆದರೆ ಮರು ಎಣಿಕೆಯ ನಂತರ ಅವರ ಮತಗಳ ಸಂಖ್ಯೆ 314 ಕ್ಕೆ ಇಳಿದು 255 ಮತಗಳ ವ್ಯತ್ಯಾಸವಾಗಿದೆ. ಈ ಕುರಿತು ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಸ್ಟ್ರಾಂಗ್ ರೂಂ ನ್ನು ಸೀಲ್ ಮಾಡಲಾಗಿದೆ ಎಂದು ತಿಳಿಸಿದರು.
Advertisement