

ಬೆಂಗಳೂರು: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಜೊತೆಗಿನ ಮೈತ್ರಿಯನ್ನು ಮುರಿದು ತಮಿಳಗ ವೆಟ್ರಿ ಕಳಗಂ (TVK) ಜೊತೆ ಕೈಜೋಡಿಸಿರುವ ಕಾಂಗ್ರೆಸ್ನ “ನಿಜಸ್ವರೂಪ” ಬಹಿರಂಗವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬುಧವಾರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಎಂಕೆ ಚುನಾವಣೆಯಲ್ಲಿ ಸೋತ ಕೂಡಲೇ ಕಾಂಗ್ರೆಸ್ ವಿಜಯ್ ನೇತೃತ್ವದ TVK ಜೊತೆ ಸೇರಿಕೊಂಡಿದೆ. ಕಾಂಗ್ರೆಸ್ಗೆ ಯಾವುದೇ ಸಿದ್ಧಾಂತವಿಲ್ಲ. ಡಿಎಂಕೆ ವಿಶ್ವಾಸಕ್ಕೆ ದ್ರೋಹ ಮಾಡಿದೆ. ಅದಕ್ಕಾಗಿಯೇ ಜನರು ಕಾಂಗ್ರೆಸ್ನ್ನು ನಂಬುವುದಿಲ್ಲ ಎಂದು ಕಿಡಿಕಾರಿದರು.
ವಿಜಯ್ ನೇತೃತ್ವದ TVK ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ, ಇಂಡಿಯಾ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಡಿಎಂಕೆಗೆ ಬೆನ್ನಿಗೆ ಚೂರಿ ಹಾಕಿದೆ. ಈಗ ಡಿಎಂಕೆ ಒಂಟಿಯಾಗಿಬಿಟ್ಟಿದೆ. ಗೆಲ್ಲುವ ಕುದುರೆಯ ಬಾಲ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದು ಸ್ಪಷ್ಟವಾಗಿದೆ. INDIA ಮೈತ್ರಿಕೂಟದಲ್ಲಿರುವ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅವರಿಗೆ ಕೂಡ ಇದೇ ರೀತಿಯ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆಯೂ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶಿಸಿದ ಬಳಿಕ ಮುಖ್ಯಮಂತ್ರಿ ಕುರ್ಚಿಯ ಚರ್ಚೆ ನಿಂತಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದರು. ಈಗ ಅವರ ಕನಸು ಭಗ್ನವಾಗಿದೆ” ಎಂದು ಟೀಕಿಸಿದರು.
Advertisement