

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಇಂದು ಚುನಾವಣೆ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ನೀಡುವ ಬದಲು ಉಪ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಮುಂದಿನ ಕಂತಿನ ಹಣವನ್ನು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಬಂದಾಗಲೇ ಬಿಡುಗಡೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.
ಚಿತ್ರದುರ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಬೀಗುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದಿದ್ದರೆ ಉಪ ಚುನಾವಣೆ ಸಂದರ್ಭ 15 ದಿನಗಳ ಕಾಲ ಬಾಗಲಕೋಟೆಯಲ್ಲಿ ಯಾಕೆ ಕೂರಬೇಕಾಗಿತ್ತು,
ಸರ್ಕಾರ ಬಡವರಿಗೆ ಯೋಜನೆಗಳನ್ನು ನೀಡಲಿ, ಯಾರೂ ಬೇಡ ಎನ್ನಲ್ಲ, ಅಲ್ಲದೇ ಇವರೊಬ್ಬರೇ ಯೋಜನೆಗಳನ್ನು ಕೊಟ್ಟಿಲ್ಲ. ಯಡಿಯೂರಪ್ಪನವರು ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಹೆಣ್ಣು ಮಕ್ಕಳಿಗೆ ಸೈಕಲ್ ಸೇರಿ ಇನ್ನೂ ಹಲವಾರು ಯೋಜನೆಗಳನ್ನು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನವರು ಜನರಿಗೆ ಆಮಿಷವೊಡ್ಡುವ ರೀತಿ ಯೋಜನೆಗಳನ್ನು ನೀಡುತ್ತಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ದೂರದೃಷ್ಟಿಯಿಂದ ಭಾಗ್ಯಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ತಂದಿದ್ದರು ಎಂದರು.
ಸೋಲಿನಿಂದ ಹತಾಶೆಗೊಂಡಿಲ್ಲ
ಉಪ ಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಂಥ ದಿಟ್ಟ ನಾಯಕತ್ವ ದೇಶಕ್ಕೆ ಸಿಕ್ಕಿದೆ. ನಿತಿನ್ ನಬಿನ್ ಅವರಂಥ ಯುವ ರಾಷ್ಟ್ರೀಯ ಅಧ್ಯಕ್ಷರು ನೇತೃತ್ವ ವಹಿಸಿಕೊಂಡಿದ್ದಾರೆ. ಅಮಿತ್ ಶಾ ಅವರಂಥ ಚುನಾವಣಾ ಚಾಣಕ್ಯ ನಮ್ಮ ಜೊತೆಗಿದ್ದಾರೆ. ಹಾಗಾಗಿ ಉಪ ಚುನಾವಣೆ ಸೋಲಿನ ಸಂಬಂಧ ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಈ ಉಪ ಚುನಾವಣೆ ಸೋಲಿನಿಂದ ಬಿಜೆಪಿ ಮತ್ತು ಕಾರ್ಯಕರ್ತರು ಹೆದರುವುದಿಲ್ಲ. ಇವೆಲ್ಲವನ್ನೂ ಮೀರಿ ಸಂಘಟನೆ ಮಾಡುತ್ತೇವೆ. ಹಿರಿಯರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಸರ್ಕಾರ ತರುತ್ತೇವೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
Advertisement