

ಬೆಂಗಳೂರು: ತಮಿಳು ನಾಡಿನಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಬೆಂಬಲ ನೀಡುವ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ, ನಮಗೆ ಕುದುರೆ ವ್ಯಾಪಾರವೂ ಗೊತ್ತಿಲ್ಲ, ಯಾವ ವ್ಯಾಪಾರವೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮಿಳು ನಾಡಿನಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ ಎಂದರು.ಶಾಸಕರು ಟಿಕೆಟ್ ಕೇಳಿದ್ದಕ್ಕಾಗಿ ಐಪಿಎಲ್ ಫೈನಲ್ ಪಂದ್ಯವನ್ನು ಗುಜರಾತ್ಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪ ಆಧಾರ ರಹಿತ. ಈ ಕುರಿತು ಬಿಸಿಸಿಐ ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ನೇರವಾಗಿ ಹೇಳಿಕೆ ನೀಡಲಿ ಎಂದರು.
ರಾಜ್ಯದಲ್ಲಿ ವಿಧಾನಸಭೆ, ವಿಧಾನ ಪರಿಷತ್ ಎರಡೂ ಸೇರಿ 300 ಶಾಸಕರಿದ್ದಾರೆ. ಒಬ್ಬರಿಗೆ ಎರಡು ಟಿಕೆಟ್ಗಳನ್ನು ನೀಡಲಾಗುತ್ತಿದ್ದು ಒಟ್ಟು 600 ಟಿಕೆಟ್ ನೀಡುವ ಕಾರಣಕ್ಕಾಗಿ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಹೇಳಲಿ. ಯಾರಿಗೆಲ್ಲ ಟಿಕೆಟ್ ಕೊಟ್ಟಿದ್ದಾರೆ? ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದ್ದಾರೆ ಹೇಳಲಿ. ಎದುರಾಳಿ ತಂಡದ ಸಿಎಸ್ಕೆಯವರೂ ಯಾರಿಗೆಲ್ಲ ಟಿಕೆಟ್ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿ, ಜೆಡಿಎಸ್ನವರು ಏನಾದರೂ ಟೀಕೆ ಮಾಡಿಕೊಳ್ಳಲಿ. ಅವರ ಅವಧಿಯಲ್ಲಿ ಕ್ರೀಡೆಗೆ ಎಷ್ಟು ಪ್ರೋತ್ಸಾಹ ನೀಡುತ್ತಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ ಗೃಹ ಸಚಿವರು, ಅಹಮದಾಬಾದ್ ಸ್ಟೇಡಿಯಂನಲ್ಲಿ 1 ಲಕ್ಷ ಆಸನಗಳಿವೆ. ಹೆಚ್ಚಿನ ಲಾಭವಾಗುತ್ತದೆ ಎಂಬ ಕಾರಣಕ್ಕೆ ಫೈನಲ್ ಸ್ಥಳಾಂತರ ಮಾಡಲಾಗಿದೆ. ಇದಕ್ಕೂ, ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದರು.
Advertisement