

ಚಿತ್ರದುರ್ಗ: ಕರ್ನಾಟಕದಲ್ಲಿ ಮುಂದಿನ ಬಾರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ನಿನ್ನೆ ನಡೆದ ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಮುಂದೆ ಕರ್ನಾಟಕದಲ್ಲಿ ಕೂಡ ಬಿಜೆಪಿ ಆಡಳಿತ ಬರಲಿದೆ. ರೈತರಿಗೆ ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪನವರು. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು.
ಇಂದಿನ ಹೋರಾಟ ಸಾಮಾಜಿಕ ಜಾಲತಾಣಕ್ಕೆ ಸೀಮಿತ ಆಗಿದೆ. ಆದರೆ ನಮ್ಮ ರಾಜ್ಯದಲ್ಲಿ ರೈತರ ಪರ, ಬಡವರ ಪರ ಹೋರಾಟಕ್ಕೆ ಹೊಸ ಪರಿಕಲ್ಪನೆ ಕೊಟ್ಟಿದ್ದು ಬಿಎಸ್ ಯಡಿಯೂರಪ್ಪ ಅವರು. ನಾವೆಲ್ಲಾ ಅವರಿಂದ ಪ್ರೇರಣೆ ಪಡೆಯಬೇಕು ಎಂದರು.
ಬಿ.ಎಸ್.ವೈ ಅವರ ಶ್ರಮ, ಛಲ ಮತ್ತು ರೈತಪರ ಕಾಳಜಿಯು ರಾಜ್ಯದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿತು. ರಾಜಕೀಯದ ಶೂನ್ಯದಿಂದ ಆರಂಭಿಸಿ ಇಂದು ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರಕೋಟೆ ನಿರ್ಮಿಸುವಲ್ಲಿ ಅವರ ಪಾತ್ರ ಅಮೋಘವಾದದ್ದು. ಬಿ.ಎಸ್. ಯಡಿಯೂರಪ್ಪ ಅವರು, ತಮ್ಮ ಐದು ದಶಕಗಳ ಸಮೃದ್ಧ ಸಾರ್ವಜನಿಕ ಸೇವೆಯ ಮೂಲಕ ಜನಮನದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ದಿಕ್ಕು ನೀಡಿದ ಅಪರೂಪದ ನಾಯಕರು ಎಂದರು.
Advertisement