

ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ, ಮಾಜಿ ಪ್ರಧಾನಮಂತ್ರಿ ಹಚ್.ಡಿ.ದೇವೇಗೌಡ ಅವರು ಎನ್ಡಿಎ ಅಭ್ಯರ್ಥಿಯಾಗಿ ಮರುನಾಮನಿರ್ದೇಶನವಾಗುತ್ತಾರೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಪಕ್ಷದ ಹಿರಿಯ ಪದಾಧಿಕಾರಿ ನಿರ್ಮಲ್ ಕುಮಾರ್ ಸುರಾನಾ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ದೇವೇಗೌಡರ ಮರುನಾಮಕರಣದ ಕುರಿತು ಪ್ರತಿಕ್ರಿಯಿಸಿದ ಅಗರ್ವಾಲ್, ಜೆಡಿಎಸ್ ವರಿಷ್ಠರ ಅಭ್ಯರ್ಥಿ ಕುರಿತ ಅಂತಿಮ ತೀರ್ಮಾನವನ್ನು ಪಕ್ಷದ ಕೇಂದ್ರ ಹೈಕಮಾಂಡ್ ತೆಗೆದುಕೊಳ್ಳುವುದರಿಂದ ಬಿಜೆಪಿ ಸದ್ಯಕ್ಕೆ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಭವಿಷ್ಯಕ್ಕೆ ದೇವೇಗೌಡರ ಸ್ಪರ್ಧೆ ನಿರ್ಣಾಯಕ
ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿದ್ದರಿಂದ ರಾಜಕೀಯ ಸಮೀಕರಣಗಳು ಸಂಪೂರ್ಣ ಬದಲಾಗಿವೆ.
ರಾಜಕೀಯ ವಿಶ್ಲೇಷಕರ ಪ್ರಕಾರ, 93 ವರ್ಷದ ದೇವೇಗೌಡರು ಮತ್ತೊಮ್ಮೆ ಕಣಕ್ಕಿಳಿದರೆ ಅದು ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಡಿಯ ಐದು ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ 2028 ರ ವಿಧಾನಸಭಾ ಚುನಾವಣೆಗಳವರೆಗೆ ಉಭಯ ಪಕ್ಷಗಳ ಮೈತ್ರಿ ಗಟ್ಟಿಯಾಗಿ ಮುಂದುವರಿಯಲು ದಿಕ್ಸೂಚಿಯಾಗಲಿದೆ ಎಂದು ತಿಳಿಸಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಮೇಲೆ ದೇವೇಗೌಡರು ಹೊಂದಿರುವ ಬಲವಾದ ಪ್ರಭಾವವು ಮೈತ್ರಿಕೂಟದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಜೆಡಿಎಸ್ ಮಾಜಿ ಎಂಎಲ್ಸಿ ಹಾಗೂ ಜಿಬಿಎ ಪ್ರದೇಶದ ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, "ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ. ಮಾಜಿ ಪ್ರಧಾನಿಯಾಗಿ ಅವರ ಅಪಾರ ಅನುಭವ ಕೇವಲ ರಾಜ್ಯದ ನೀರಾವರಿ ಸಮಸ್ಯೆಗಳಿಗಷ್ಟೇ ಅಲ್ಲ, ಇಡೀ ದೇಶಕ್ಕೆ ಧ್ವನಿಯಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಸುಲಭವಾಗಿ ಒಂದು ಸ್ಥಾನವನ್ನು ಗೆಲ್ಲಬಹುದಾಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ, ಪಕ್ಷದ ಹೈಕಮಾಂಡ್ ಅನಿರೀಕ್ಷಿತ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎನ್ನಲಾಗುತ್ತಿದ್ದು, ಮಹಾರಾಷ್ಟ್ರದಂತಹ ಪಕ್ಷ ಅಧಿಕಾರದಲ್ಲಿರುವ ಇತರ ರಾಜ್ಯಗಳಿಂದ ಕರ್ನಾಟಕದ ಬಿಜೆಪಿ ನಾಯಕರನ್ನು ನಾಮನಿರ್ದೇಶನ ಮಾಡುವುದನ್ನು ಸಹ ಪರಿಗಣಿಸಬಹುದು ಎಂದು ಮೂಲಗಳು ತಿಳಿಸಿವೆ.
ದೇವೇಗೌಡರ ಹೊರತಾಗಿ ಜೂನ್ 25 ಕ್ಕೆ ನಿವೃತ್ತರಾಗುತ್ತಿರುವ ಮತ್ತೊಬ್ಬ ಪ್ರಮುಖ ನಾಯಕರೆಂದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಅವರ ಮರುನಾಮಕರಣವೂ ರಾಜಕೀಯ ವಲಯಗಳಲ್ಲಿ ಕುತೂಹಲ ಮೂಡಿಸಿದೆ.
ಬಿಜೆಪಿಯ ಈರಣ್ಣ ಕಡಾಡಿ ಮತ್ತು ಕೆ. ನಾರಾಯಣ್ ಕೂಡ ಅದೇ ದಿನ ನಿವೃತ್ತರಾಗುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದು, ಅಷ್ಟರೊಳಗೆ ಎಲ್ಲಾ ಕುತೂಹಲಗಳಿಗೂ ತೆರೆ ಬೀಳಲಿದೆ.
ವಿಧಾನಸಭೆಯ ಸಂಖ್ಯಾಬಲದ ಚಿತ್ರಣ
ರಾಜ್ಯ ವಿಧಾನಸಭೆಯಲ್ಲಿ, ಇಂಡಿಯಾ ಬ್ಲಾಕ್ 140 ಶಾಸಕರನ್ನು ಹೊಂದಿದ್ದು, ಇದರಲ್ಲಿ ಕಾಂಗ್ರೆಸ್ನ 137 ಮತ್ತು ಮೂವರು ಸ್ವತಂತ್ರರು ಸೇರಿದ್ದಾರೆ,
ಇನ್ನು ವಿರೋಧ ಪಕ್ಷವು 82 ಸದಸ್ಯರನ್ನು ಹೊಂದಿದ್ದು, ಎನ್ಡಿಎಯಲ್ಲಿ ಬಿಜೆಪಿಯ 63, ಜೆಡಿಎಸ್ನ 18 ಮತ್ತು ಒಬ್ಬ ಸ್ವತಂತ್ರ ಸೇರಿದಂತೆ 81 ಶಾಸಕರಿದ್ದಾರೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.
ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಎನ್ಡಿಎ ಒಂದು ಸ್ಥಾನವನ್ನು ಗೆಲ್ಲಬಹುದು. 222 ಸದಸ್ಯ ಬಲದ ವಿಧಾನಸಭೆಯಲ್ಲಿ, ಒಬ್ಬ ಅಭ್ಯರ್ಥಿಗೆ 44.41 ಮೊದಲ ಪ್ರಾಶಸ್ತ್ಯದ ಮತಗಳ ಅಗತ್ಯವಿದ್ದು, ಸಂಖ್ಯಾಬಲದ ಪ್ರಕಾರ, ಕಾಂಗ್ರೆಸ್ 3 ಮತ್ತು ಎನ್ಡಿಎ ಮೈತ್ರಿಕೂಟ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.
Advertisement