ಮೇ.26ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ-ರಾಜ್ಯಸಭೆ ಸ್ಥಾನಗಳ ಕುರಿತು ಚರ್ಚೆ, ಹೆಚ್ಚಿದ ಕುತೂಹಲ

ಸಂಪುಟ ಪುನರ್‌ರಚನೆಯ ಮೂಲಕ ಪ್ರಾದೇಶಿಕ ಹಾಗೂ ಸಮುದಾಯ ಆಧಾರಿತ ಪ್ರತಿನಿಧಿತ್ವ ಹೆಚ್ಚಿಸುವುದು, ಕಾರ್ಯಕ್ಷಮತೆ ಆಧಾರಿತ ಬದಲಾವಣೆಗಳನ್ನು ತರಲು ಕಾಂಗ್ರೆಸ್ ನಾಯಕತ್ವ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 26ರಂದು ದೆಹಲಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರ ದೆಹಲಿ ಭೇಟಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಚರ್ಚೆಯಾಗಬಹುದು ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದರೂ, ಪಕ್ಷದ ಹಿರಿಯ ನಾಯಕರು ಇದನ್ನು ತಳ್ಳಿ ಹಾಕಿದ್ದಾರೆ.

ನಾಯಕತ್ವದ ಪ್ರಶ್ನೆ ಈಗ ಚರ್ಚೆಯ ವಿಷಯವೇ ಅಲ್ಲ. ಪ್ರಸ್ತುತ ಇರುವ ವ್ಯವಸ್ಥೆಯೇ ಮುಂದುವರಿಯಲಿದೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಆದರೆ, ಈ ಭೇಟಿಯ ಮುಖ್ಯ ಉದ್ದೇಶ ಬಹುನಿರೀಕ್ಷಿತ ಸಚಿವ ಸಂಪುಟ ಪುನರಾಚನೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆಯುವುದು ಎನ್ನಲಾಗಿದೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೊಡ್ಡ ಮಟ್ಟದ ಸಚಿವ ಸಂಪುಟ ಪುನರಾಚನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

CM Siddaramaiah
ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಭೋಜನ ಕೂಟ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಭಾಗಿ; ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಚರ್ಚೆ ಮುನ್ನಲೆಗೆ

ಸಂಪುಟ ಪುನರ್‌ರಚನೆಯ ಮೂಲಕ ಪ್ರಾದೇಶಿಕ ಹಾಗೂ ಸಮುದಾಯ ಆಧಾರಿತ ಪ್ರತಿನಿಧಿತ್ವ ಹೆಚ್ಚಿಸುವುದು, ಕಾರ್ಯಕ್ಷಮತೆ ಆಧಾರಿತ ಬದಲಾವಣೆಗಳನ್ನು ತರಲು ಕಾಂಗ್ರೆಸ್ ನಾಯಕತ್ವ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಹಲವು ಶಾಸಕರು ಹಾಗೂ ಸಚಿವ ಸ್ಥಾನ ಆಕಾಂಕ್ಷಿಗಳ ಒತ್ತಡದ ನಡುವೆಯೇ ಈ ಬದಲಾವಣೆ ಮಹತ್ವ ಪಡೆದಿದೆ.

ಇದೇ ವೇಳೆ ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರುಗಳು ಹಾಗೂ ವಿಧಾನ ಪರಿಷತ್ ನಾಮನಿರ್ದೇಶನಗಳ ವಿಚಾರವೂ ಚರ್ಚೆಗೆ ಬರಲಿವೆ ಎನ್ನಲಾಗಿದೆ.

ವಿಧಾನ ಪರಿಷತ್ ಚುನಾವಣೆಯ ನಂತರ ಕಾಂಗ್ರೆಸ್ ಮೇಲ್ಮನೆಯಲ್ಲಿ ಅತಿ ದೊಡ್ಡ ಪಕ್ಷವಾಗಲಿದ್ದು, ಮುಂದಿನ ಸಭಾಪತಿ ಸ್ಥಾನವೂ ಕಾಂಗ್ರೆಸ್ ಪಾಲಾಗುವ ಸಾಧ್ಯತೆ ಇದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ನಗರ ಪಾಲಿಕೆ ಚುನಾವಣೆಗಳು ಸೇರಿದಂತೆ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ತಂತ್ರಗಳ ಕುರಿತೂ ಈ ಭೇಟಿಯಲ್ಲಿ ಚರ್ಚೆಯಾಗಲಿದೆ ಎನ್ನಲಾಗುತ್ತಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಹಿಡಿತ ಬಲಪಡಿಸಲು ಅಭ್ಯರ್ಥಿ ಆಯ್ಕೆ ಮತ್ತು ಚುನಾವಣಾ ತಂತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕಾಂಗ್ರೆಸ್ ತನ್ನ ರಾಜಕೀಯ ವೇಗವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದು, ಸಿದ್ದರಾಮಯ್ಯ ಅವರ ಈ ದೆಹಲಿ ಭೇಟಿ, ರಾಜ್ಯ ಸರ್ಕಾರದ ಮುಂದಿನ ರಾಜಕೀಯ ದಿಕ್ಕು ನಿರ್ಧರಿಸುವ ಮಟ್ಟಿಗೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com