

ಶಿವಮೊಗ್ಗ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಜೋರಾಗಿರುವ ನಡುವೆಯೇ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಲು ವಿಫಲವಾಗಿದೆ ಎಂಬ ನಿರ್ಣಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದ್ದು, ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬುಧವಾರ ಹೇಳಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರೇ ಆದರೂ ಅವರು ಪೂರ್ಣಾವಧಿ ಮುಗಿಸುವುದಿಲ್ಲ, ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಭವಿಷ್ಯವಾಣಿಯನ್ನೂ ನುಡಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಲು ವಿಫಲವಾಗಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ಒಪ್ಪಿಕೊಂಡಿದೆ. ಆದ್ದರಿಂದ ಮುಖ್ಯಮಂತ್ರಿ ಬದಲಾವಣೆ ಮಾಡಲು ತೀರ್ಮಾನಿಸಿದೆ ಎಂದು ಅವರು ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನಿನ್ನೆ ದೆಹಲಿಯಲ್ಲಿ ನಡೆದ ದೀರ್ಘ ಸಭೆಗಳ ಬಳಿಕ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂಬ ನಿರ್ಧಾರ ಅಂತಿಮಗೊಂಡಿದೆ ಎಂದು ಅವರು ಹೇಳಿದರು. ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಮುಖ್ಯವಲ್ಲ. ರಾಜ್ಯದ ಆಡಳಿತದ ಸ್ಥಿತಿ ಏನಾಗಿದೆ ಎನ್ನುವುದೇ ಮುಖ್ಯ ಎಂದು ವಿಜಯೇಂದ್ರ ಹೇಳಿದರು.
ರಾಜ್ಯ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬುದರ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕಾದ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ನಲ್ಲಿ ಒಳಜಗಳಗಳಿಂದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಅವರು ಆರೋಪಿಸಿದರು.
ಅಕ್ರಮಗಳ ಕುರಿತು ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಗಳಂತಹ ಪ್ರಕರಣಗಳು ನಡೆದಿವೆ ಎಂದು ಹೇಳಿದರು.
2024ರ ಲೋಕಸಭಾ ಚುನಾವಣೆಯ ವೇಳೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 87 ಕೋಟಿ ರೂಪಾಯಿ ಹಣದ ಅಕ್ರಮ ವರ್ಗಾವಣೆಯನ್ನು ಉಲ್ಲೇಖಿಸುತ್ತಿದ್ದರು. ಈ ಪ್ರಕರಣದಲ್ಲಿ ಲೆಕ್ಕಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿದ್ದರು ಎನ್ನಲಾದ ಡೆತ್ ನೋಟ್ ನಲ್ಲಿ ಹಗರಣವನ್ನು ಬಹಿರಂಗಪಡಿಸಿತ್ತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಹಾಗೂ ಸಂಬಂಧಿಕರೊಬ್ಬರು ಆರೋಪಿಗಳಾಗಿದ್ದರು.
ಈ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ತಮ್ಮ ವರದಿಯಲ್ಲಿ ಅವರಿಗೆ ಕ್ಲೀನ್ಚಿಟ್ ನೀಡಿದ್ದು, ನ್ಯಾಯಾಲಯ ಅದನ್ನು ಸ್ವೀಕರಿಸಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಾಲದ ಬಲೆಗೆ ಸಿಲುಕಿದೆ ಎಂದು ವಿಜಯೇಂದ್ರ ಆರೋಪಿಸಿದರು. ದಕ್ಷಿಣ ಭಾರತದ ಇತರೆ ರಾಜ್ಯಗಳೊಂದಿಗೆ ಹೋಲಿಸಿದರೆ, ಸಿದ್ದರಾಮಯ್ಯ ಅವರು ರಾಜ್ಯವನ್ನು ಸುಮಾರು 10 ಲಕ್ಷ ಕೋಟಿ ರೂಪಾಯಿ ಸಾಲದ ಹೊರೆಗೆ ತಳ್ಳಿದ್ದಾರೆ. ರಾಜ್ಯ ಯಾವ ಮಟ್ಟಿಗೆ ಸಾಲದ ಬಲೆಗೆ ಸಿಲುಕಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಶಿಕಾರಿಪುರ ಶಾಸಕರೂ ಆಗಿರುವ ವಿಜಯೇಂದ್ರ ಹೇಳಿದರು.
ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ನೀಡಿ ಯಾರು ಬಂದರೂ ಆಡಳಿತದಲ್ಲಿ ಗೊಂದಲ ಉಂಟಾಗುವುದನ್ನು ಜನರು ಕಾಣುತ್ತಾರೆ ಎಂದರು.
ಕರ್ನಾಟಕದಲ್ಲಿ ಮುಂಗಡ ಚುನಾವಣೆ ಖಚಿತವಾಗಿ ನಡೆಯಲಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಪಕ್ಷದ ಒಳಭೇದಗಳು ಬಿಜೆಪಿಗೆ ಲಾಭ ತರುತ್ತವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಬಿಜೆಪಿ ತನ್ನದೇ ಆದ ಕಾರ್ಯಸೂಚಿಯನ್ನು ಜನರ ಮುಂದೆ ಇಡುವುದರ ಮೇಲೆ ಗಮನಹರಿಸಲಿದೆ ಎಂದರು.
ಸರ್ಕಾರ ವಿರೋಧಿ ಅಲೆ ಎಂಬುದು ಕೇವಲ ಬೋನಸ್ ಮಾತ್ರ. ಮುಖ್ಯವಾದುದು ನಾವು ರಾಜ್ಯದ ಜನರಿಗೆ ಏನು ನೀಡುತ್ತೇವೆ ಎಂಬುದಾಗಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರ ಕರ್ನಾಟಕ ಭೇಟಿಯ ಬಗ್ಗೆ ಕೂಡ ವಿಜಯೇಂದ್ರ ಮಾತನಾಡಿದರು. ನಬೀನ್ ಅವರು ಬೆಂಗಳೂರಿನಲ್ಲಿ ಶಾಸಕರು, ಸಂಸದರು ಹಾಗೂ ಯುವ ಪ್ರತಿನಿಧಿಗಳೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಸಂಘಟನಾ ವಿಚಾರಗಳಲ್ಲಿ ನಿತಿನ್ ನಬಿನ್ ಅವರಿಗೆ ಅಪಾರ ಅನುಭವವಿದೆ. ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ದೃಢನಿಶ್ಚಯ ಮತ್ತು ಸಾಮರ್ಥ್ಯ ಅವರಿಗಿದೆ ಎಂದು ಹೇಳಿದರು.
Advertisement