

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಕಳೆದ ಮೂರು ವರ್ಷಗಳಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ ಅವರೊಂದಿಗಿನ ಮಹತ್ವದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ (Power Sharing Formula) ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
ನಾಳೆ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್
ಸಿಎಂ ಸಿದ್ದರಾಮಯ್ಯ ಕಳೆದ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಅಪರಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ನಾಳೆ ಬೆಳಗ್ಗೆ 9ಕ್ಕೆ ಸಿದ್ದರಾಮಯ್ಯ ಡಿ ಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದು ಅದರಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಅದಾದ ನಂತರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.
ಹೈಕಮಾಂಡ್ ಸಭೆಯಲ್ಲಿ ಏನೇನು ಚರ್ಚೆ ಆಯ್ತು? ಸಿದ್ದರಾಮಯ್ಯಗೆ ಕೊಟ್ಟ ಆಫರ್ಗಳು ಏನೇನು?
ನಿನ್ನೆ ಮಂಗಳವಾರ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯು ತೀವ್ರ ಕುತೂಹಲ ಮೂಡಿಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು.
ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಪ್ರತ್ಯೇಕ ಸಭೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಹಾಗೂ ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕತ್ವ ಬದಲಾವಣೆ ಅನಿವಾರ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ರಾಜ್ಯಸಭಾ ಸ್ಥಾನದ ಆಫರ್ ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸದಾಗಿ ರಚನೆಯಾಗಲಿರುವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಪಟ್ಟ ನೀಡುವ ಆಫರ್ ನ್ನು ಹೈಕಮಾಂಡ್ ಮುಂದಿಟ್ಟಿದೆ ಎನ್ನಲಾಗಿದೆ.
ಇಂದು ಬೆಂಗಳೂರಿಗೆ ಸುರ್ಜೆವಾಲಾ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಇಂದು ಬೆಂಗಳೂರಿಗೆ ಆಗಮಿಸಿ ಮಹತ್ವದ ಸಭೆ ನಡೆಸಲಿದ್ದಾರೆ.
Advertisement