

ಬೆಳಗಾವಿ/ನವದೆಹಲಿ: ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ದೆಹಲಿಯಲ್ಲಿರುವ ಜಾರಕಿಹೊಳಿ ಅವರು, ಕಳೆದ ಆರು ತಿಂಗಳಿನಿಂದ ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಊಹಾಪೋಹಗಳು ಮತ್ತು ಅನಿಶ್ಚಿತತೆ ಮುಂದುವರಿದಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಈ ವಿಚಾರಕ್ಕೆ ಶೀಘ್ರ ಸ್ಪಷ್ಟತೆ ಸಿಗುವ ನಿರೀಕ್ಷೆ ಹೆಚ್ಚಾಗಿದೆ ಎಂದು ಹೇಳಿದರು.
ಈ ಸಮಸ್ಯೆಯನ್ನು ಇಂದು (ಮಂಗಳವಾರ), ನಾಳೆ ಅಥವಾ ನಾಡಿದ್ದು ಚರ್ಚೆಗಳು ಮುಂದುವರಿಯಬಹುದು. ಆದರೆ, ಈ ವಿಷಯವನ್ನು ಇತ್ಯರ್ಥಪಡಿಸಬೇಕಿರುವುದಂತೂ ಸತ್ಯದ ವಿಚಾರ ಎಂದು ತಿಳಿಸಿದರು.
ಇದೇ ವೇಳೆ ತಮಗೆ ಪಕ್ಷದ ಹೈಕಮಾಂಡ್ನಿಂದ ಪ್ರತ್ಯೇಕ ಆಹ್ವಾನ ಬಂದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ಬಂದಿದ್ದೇನೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ಹುದ್ದೆಯ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಪಕ್ಷದ ನಾಯಕತ್ವ ಯಾವ ಜವಾಬ್ದಾರಿಯನ್ನು ನೀಡಿದರೂ ಅದನ್ನು ಪರಿಗಣಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ಪಕ್ಷದ ನಾಯಕರು ಯಾವುದೇ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸೂಚಿಸಿದರೆ, ಅದನ್ನು ಪರಿಗಣಿಸಿ ನನ್ನ ಅಭಿಪ್ರಾಯವನ್ನು ಹೈಕಮಾಂಡ್ಗೆ ತಿಳಿಸುತ್ತೇನೆಂದು ಹೇಳಿದರು.
ರಾಜ್ಯ ನಾಯಕತ್ವದ ಕುರಿತ ಗೊಂದಲ ನಿವಾರಣೆಯಾದ ಬಳಿಕ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಸೇರಿದಂತೆ ಬಾಕಿ ಉಳಿದಿರುವ ಇತರೆ ರಾಜಕೀಯ ವಿಚಾರಗಳಿಗೂ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.
Advertisement