

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಇಂದು ಬೆಳಗ್ಗೆ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ಕಾರಿನಲ್ಲಿ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ಸಚಿವರು ವಾಪಸ್ ತೆರಳುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳು ಸಿಎಂ ರಾಜೀನಾಮೆ ನೀಡುತ್ತಾರೆಯೇ ಎಂದು ಕೇಳಿದರು.
ಆಗ ದುಃಖ ತಡೆಯಲಾರದೆ ಕಾರಿನಲ್ಲಿ ಕುಳಿತಲ್ಲಿಯೇ ಕಣ್ಣೀರು ಹಾಕಿದ್ದಾರೆ. 3 ಗಂಟೆಗೆ ರಾಜೀನಾಮೆ ಕೊಡುತ್ತಾರೆ ಎಂದಷ್ಟೇ ಹೇಳಿ ಕಣ್ಣೀರು ಹಾಕುತ್ತಾ ಹೋಗಿದ್ದಾರೆ.
ರಾಜ್ಯ ರಾಜಕೀಯದ ಪಟ್ಟದಾಟದಲ್ಲಿ ರಾಜಕೀಯ ಊಹಾಪೋಹಗಳಿಗೆ ತೆರೆ ಎಳೆದ ಸಿದ್ದರಾಮಯ್ಯ ಅವರು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ವೇಳೆ ಅವರು ಭಾವುಕರಾದರು ಎಂದು ತಿಳಿದುಬಂದಿದೆ.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದ ಪ್ರಸಂಗ ನಡೆದಿದೆ.
ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ. ಜನಪರ ಆಡಳಿತವನ್ನು ಮುಂದುವರಿಸಿ ಎಂದು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಕರೆ ನೀಡಿದ್ದಾರೆ. ಅಲ್ಲದೆ, ಬಿಜೆಪಿಯ ರಾಜಕಾರಣದ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದ್ದಾರೆ.
ಸಿದ್ದರಾಮಯ್ಯ ರಾಜ್ಯಸಭೆಗೆ ಹೋಗುವುದಿಲ್ಲ, ಡಿಕೆಶಿ ಮುಂದಿನ ಸಿಎಂ ಎಂದ ಹೆಚ್.ಕೆ ಪಾಟೀಲ್
ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ವಾಪಸ್ ಆಗುವ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಮೂರು ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆ. ಅವರು ರಾಜ್ಯಸಭೆಗೆ ಹೋಗುವುದಿಲ್ಲ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗ್ತಾರೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
Advertisement