

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದು, ಈ ನಡುವಲ್ಲೇ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಭಾರೀ ಕಸರತ್ತು ನಡೆಸಿದೆ.
ಪಕ್ಷದ ವಿವಿಧ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ 11:11:11 ಸಚಿವ ಸ್ಥಾನಗಳ ಫಾರ್ಮುಲಾ ಅಂತಿಮಗೊಳಿಸುವತ್ತ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಒಟ್ಟು 34 ಸದಸ್ಯರ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸುಮಾರು 11 ಸ್ಥಾನಗಳನ್ನು ಹೈಕಮಾಂಡ್ ಆಯ್ಕೆಯ ನಾಯಕರಿಗೆ, 11 ಸ್ಥಾನಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರಿಗೆ ಹಾಗೂ 11 ಸ್ಥಾನಗಳನ್ನು ನೂತನ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಆಪ್ತರಿಗೆ ನೀಡುವ ಕುರಿತು ಚರ್ಚೆ ನಡೆದಿದೆ. ಅಂತಿಮ ಹಂತದ ಮಾತುಕತೆಗಳ ಆಧಾರದಲ್ಲಿ ಈ ಸಂಖ್ಯೆಯಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗುವ ಸಾಧ್ಯತೆಯೂ ಇದೆ.
ಹೊಸ ಸರ್ಕಾರವು ಚುರುಕಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಯುವ, ಸಕ್ರಿಯ ಹಾಗೂ ಉತ್ತಮ ಸಾಧನೆ ತೋರಿದ ಶಾಸಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಸಚಿವ ಸ್ಥಾನ ಯಾರಿಗೆ ಸಿಗುತ್ತದೆ ಎಂಬುದೇ ಈ ಸರ್ಕಾರದ ಕಾರ್ಯಶೈಲಿ ಮತ್ತು ಜನರ ಮುಂದೆ ಮೂಡುವ ಚಿತ್ರಣವನ್ನು ನಿರ್ಧರಿಸಲಿದೆ ಎಂದು ಪಕ್ಷದ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಮೊದಲ ಹಂತದಲ್ಲೇ 10ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಅವಕಾಶ
ಡಿ.ಕೆ. ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಕನಿಷ್ಠ 10 ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಆರಂಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗಳ ಕುರಿತು ಚರ್ಚೆ ನಡೆದಿದ್ದರೂ, ಹೊಸ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳ ನೇಮಕ ಇರುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ನ ನಾಯಕರು ಸ್ಪಷ್ಟಪಡಿಸಿದ್ದಾರೆ.
ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಯ್ಕೆ
ರಾಜ್ಯ ಕಾಂಗ್ರೆಸ್ನ ನೂತನ ಅಧ್ಯಕ್ಷರ ಆಯ್ಕೆಯನ್ನೂ ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಈ ಹುದ್ದೆಗೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಹಿಂದಿನ ಸರ್ಕಾರದಲ್ಲಿ ಎಸ್ಟಿ ಸಮುದಾಯದ ಸಚಿವರಾಗಿದ್ದ ಬಿ.ನಾಗೇಂದ್ರ ಮತ್ತು ಕೆ.ಎನ್.ರಾಜಣ್ಣ ಅವರಿಗೆ ಅವಕಾಶ ಸಿಗದ ಹಿನ್ನೆಲೆ, ಈ ಬಾರಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ವಿಚಾರ ಕಾಂಗ್ರೆಸ್ಗೆ ಪ್ರಮುಖ ಸವಾಲಾಗಿದೆ.
ಯತೀಂದ್ರಗೆ ಸಚಿವ ಸ್ಥಾನ ಸಾಧ್ಯತೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಪಸಂಖ್ಯಾತ ಸಮುದಾಯದ ಕೋಟಾದಲ್ಲಿ ಹಿರಿಯ ನಾಯಕರುಗಳಾದ ಜಮೀರ್ ಅಹ್ಮದ್ ಖಾನ್, ಎನ್.ಎ.ಹ್ಯಾರಿಸ್ ಹಾಗೂ ಯು.ಟಿ.ಖಾದರ್ ಅವರ ಹೆಸರುಗಳೂ ಪ್ರಮುಖವಾಗಿ ಕೇಳಿಬರುತ್ತಿವೆ.
ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆಲ ಆಪ್ತ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಇನ್ನಷ್ಟು ಕಾಲ ಕಾಯಬೇಕಾಗಬಹುದು ಎಂದು ಹೇಳಲಾಗುತ್ತಿದೆ.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಇಕ್ಬಾಲ್ ಹುಸೇನ್, ಬಸವರಾಜ ಶಿವಗಂಗೆ ಹಾಗೂ ನಯನಾ ಮೋಟಮ್ ಅವರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಇವರನ್ನು ವಿವಿಧ ಮಂಡಳಿ ಹಾಗೂ ನಿಗಮಗಳ ಪ್ರಮುಖ ಹುದ್ದೆಗಳಲ್ಲಿ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದರಾಮಯ್ಯಗೆ CLP ಕೃತಜ್ಞತೆ
ಇದಕ್ಕೂ ಮುನ್ನ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಸಿದ್ದರಾಮಯ್ಯ ಅವರ ಸೇವೆಯನ್ನು ಶ್ಲಾಘಿಸಿ ವಿಶೇಷ ನಿರ್ಣಯ ಅಂಗೀಕರಿಸಲಾಯಿತು.
2013-18 ಹಾಗೂ 2023-26ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಮತ್ತು ಎರಡು ಬಾರಿ ಪ್ರತಿಪಕ್ಷ ನಾಯಕರಾಗಿ ಅವರು ಸಲ್ಲಿಸಿದ ಸೇವೆಯನ್ನು ಪಕ್ಷ ಸ್ಮರಿಸಿತು.
ಸಾಮಾಜಿಕ ನ್ಯಾಯದ ಪರ ಬದ್ಧತೆ, ಆಡಳಿತ ಸಾಮರ್ಥ್ಯ, ಪಕ್ಷದ ತತ್ವಗಳಿಗೆ ನಿಷ್ಠೆ ಹಾಗೂ ಹೈಕಮಾಂಡ್ ಮೇಲಿನ ವಿಶ್ವಾಸವು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನಿಗೂ ಮಾದರಿಯಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದ ಜನರ ಅಭಿವೃದ್ಧಿ ಮತ್ತು ಪರಿವರ್ತನಾ ಕಾರ್ಯಗಳಿಗೆ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಮುಂದೆಯೂ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕತ್ವ ಅಭಿಪ್ರಾಯಪಟ್ಟಿದೆ.
Advertisement