2028ರಲ್ಲಿ ಕರ್ನಾಟಕದಲ್ಲಿ ಮತ್ತೆ, 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಡಿ ಕೆ ಶಿವಕುಮಾರ್; Video

ಉತ್ತರಾಖಂಡದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ಕರ್ನಾಟಕದಲ್ಲಿ ಬಿಜೆಪಿ ಮಾಡಿರುವ ದುಷ್ಕೃತ್ಯಗಳನ್ನು ಮರೆಮಾಚಲು ಪ್ರಾಯಶ್ಚಿತ್ತ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದರು.
D K Shivakumar
ಡಿ ಕೆ ಶಿವಕುಮಾರ್
Updated on

ಬಿಜೆಪಿ ನಡೆಸುತ್ತಿರುವ ‘ಪಾದಯಾತ್ರೆ’ಗೆ ಪ್ರತಿಯಾಗಿ ಕಾಂಗ್ರೆಸ್ ಶೀಘ್ರದಲ್ಲೇ “ಯಾತ್ರೆ” ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 2028ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, 2029ರಲ್ಲಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರಾಖಂಡದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ಕರ್ನಾಟಕದಲ್ಲಿ ಬಿಜೆಪಿ ಮಾಡಿರುವ ದುಷ್ಕೃತ್ಯಗಳನ್ನು ಮರೆಮಾಚಲು ಪ್ರಾಯಶ್ಚಿತ್ತ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷವು ಏಕತೆಯ ಸಂದೇಶ ಸಾರಲು ಭಾರತ್ ಜೋಡೋ ಯಾತ್ರೆ ಹಾಗೂ ನೀರಿಗಾಗಿ ಮೇಕೆದಾಟು ಯಾತ್ರೆ ನಡೆಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿ, ನಾವು ಮೇಕೆದಾಟು ಯಾತ್ರೆ ನಡೆಸಿದಾಗ ಬಿಜೆಪಿ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಿತ್ತು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿಯೂ ನಮ್ಮನ್ನು ಕಿರುಕುಳಕ್ಕೊಳಪಡಿಸಿತು. ಆದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ನಮ್ಮಲ್ಲಿ ಯಾರೂ ಹೆದರಲಿಲ್ಲ. ಶೀಘ್ರದಲ್ಲೇ ನಾವು ನಿಮಗೆ ಯಾತ್ರೆಯ ಮೂಲಕವೇ ಉತ್ತರ ನೀಡುತ್ತೇವೆ.

D K Shivakumar
ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ?

ಬಿಜೆಪಿಯ ದಿನಗಳು ಎಣಿಕೆಯಾಗುತ್ತಿವೆ. ಎಲ್ಲರ ಧ್ವನಿಯನ್ನೂ ಹತ್ತಿಕ್ಕಲು ಅದು ಪ್ರಯತ್ನಿಸುತ್ತಿದೆ. ಅದರ ಅಂತ್ಯ ಸಮೀಪಿಸಿದೆ. 2028ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. 2029ರಲ್ಲಿ ದೇಶದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಮ್ಮ ಆಡಳಿತ ಮತ್ತು ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಹುಟ್ಟಿನಿಂದಲೇ ಹೋರಾಟಗಾರ. ಮುಂದೆಯೂ ಅವರು ಹೋರಾಟಗಾರರಾಗಿಯೇ ಇರುತ್ತಾರೆ. ಅವರ ವಿರುದ್ಧ ನೂರು ಪ್ರಕರಣಗಳನ್ನು ದಾಖಲಿಸಿದರೂ ಅವರು ಹೆದರುವುದಿಲ್ಲ. ಇತರರಂತೆ ರಾಹುಲ್ ಗಾಂಧಿ ಯಾವುದೇ ಬಾಂಡ್‌ಗೆ ಸಹಿ ಮಾಡುವುದಿಲ್ಲ ಅಥವಾ ಕ್ಷಮೆಯಾಚಿಸುವುದಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ನ್ನು ಘೋರ ಅನ್ಯಾಯ ಎಂದು ಬಣ್ಣಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಬಗ್ಗೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಷ್ಟೇ ಎಂದು ಅವರು ಹೇಳಿದರು.

ಯಾರೋ ಒಬ್ಬರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವುದು ಸಂವಿಧಾನ ವಿರೋಧಿ ಕೃತ್ಯ. ಅಸ್ಪೃಶ್ಯತೆಗೆ ಸಂವಿಧಾನದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಸಂವಿಧಾನ ಹೇಳುತ್ತದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿ ಅವರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.

ಈ ಎಫ್‌ಐಆರ್‌ಗೆ ನಾವು ಹೆದರುವುದಿಲ್ಲ. ಸತ್ಯ ಮತ್ತು ಅಹಿಂಸೆಯ ಮೂಲಕ ಹೋರಾಡಿದ ಪರಂಪರೆಗೆ ನಾವು ಸೇರಿದವರು ಎಂದು ಅವರು ಹೇಳಿದರು. ಬಿಜೆಪಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ, ಅದರ ನಾಯಕರಿಗೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

80 ವರ್ಷಗಳಿಂದ ನಮಗೆ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಟ್ಟಿರುವ ಸಂವಿಧಾನವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ನಾವು ಹೋರಾಡಲೇಬೇಕು ಎಂದು ಹರಿಪ್ರಸಾದ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com