

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ಮಾಜಿ ಸಚಿವ, ಸಹಕಾರ ಕ್ಷೇತ್ರದ ನಾಯಕ ಕೆ.ಎನ್. ರಾಜಣ್ಣ ನಡುವೆ ಮತ್ತೊಮ್ಮೆ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ.
ಈ ಚುನಾವಣೆ ಮಹತ್ವ ಪಡೆದುಕೊಂಡಿರುವುದಕ್ಕೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಪ್ರಯತ್ನದ ವೇಳೆ ಡಿ ಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ಉಂಟಾಗಿದ್ದ ರಾಜಕೀಯ ಸಂಘರ್ಷವೂ ಕಾರಣವಾಗಿದೆ.
ಆಗ ಉಪಮುಖ್ಯಮಂತ್ರಿಯಾಗಿದ್ದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾವ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರ ಉಮೇದುವಾರಿಕೆಗೆ ಬೆಂಬಲ ನೀಡಿದ್ದರು ಎನ್ನಲಾಗಿತ್ತು. ಮತ್ತೊಂದೆಡೆ, ಈ ಹಿಂದೆ ಅಧ್ಯಕ್ಷರಾಗಿದ್ದ ರಾಜಣ್ಣ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಆ ಸಂದರ್ಭದಲ್ಲಿ ರಾಜಣ್ಣ ಅವರ ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚಿದ್ದ ಹಿನ್ನೆಲೆಯಲ್ಲಿ ಚುನಾವಣೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು.
ಬಳಿಕ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶದ ಮೂಲಕ ಡಿ ಕೆ ಶಿವಕುಮಾರ್ ಅವರು ಚುನಾವಣೆಯನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದರು ಎನ್ನಲಾಗಿದೆ. ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ತೀವ್ರ ಆಂತರಿಕ ಚರ್ಚೆಯೂ ನಡೆದಿತ್ತು.
ಆದರೆ, ಇದೀಗ ಪರಿಸ್ಥಿತಿ ಸಾಕಷ್ಟು ಬದಲಾಗಿದೆ. 19 ನಿರ್ದೇಶಕರ ಪೈಕಿ ಸುಮಾರು 11 ಮಂದಿ ರಾಜಣ್ಣ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ನಿರ್ದೇಶಕರು, ಹಾಸನ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸೇರಿದಂತೆ ಕೆಲವರು ರಾಜಣ್ಣ ಅವರನ್ನು ಬೆಂಬಲಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.
ರಾಜಣ್ಣ ಅವರು ಸೂರಜ್ ರೇವಣ್ಣ ಅವರ ತಂದೆ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಾಜಣ್ಣ ಹಾಗೂ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದ್ದು, 2028ರ ವಿಧಾನಸಭಾ ಚುನಾವಣೆಗೆ ಮುನ್ನ ಜೆಡಿಎಸ್ನತ್ತ ವಾಲುವ ಸಾಧ್ಯತೆಯ ಬಗ್ಗೆ ರಾಜಕೀಯ ಸಂದೇಶ ರವಾನಿಸಿದೆ ಎನ್ನಲಾಗಿದೆ.
ಇದೇ ವೇಳೆ, ಕಾಂಗ್ರೆಸ್ನ ಆಂತರಿಕ ರಾಜಕೀಯ ಸಮೀಕರಣಗಳು ಚುನಾವಣೆಯ ಫಲಿತಾಂಶ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಡಿ ಕೆ ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ನ ಪ್ರಮುಖ ನಾಯಕರಲ್ಲಿ ರಾಜಣ್ಣ ಕೂಡ ಒಬ್ಬರಾಗಿದ್ದರು. ಕರ್ನಾಟಕದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿದ ‘ವೋಟ್ ಚೋರಿ’ ಅಭಿಯಾನವನ್ನು ಟೀಕಿಸಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಮತ್ತೆ ಸಚಿವ ಸಂಪುಟಕ್ಕೆ ಮರಳುವ ಸಾಧ್ಯತೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಅಪೆಕ್ಸ್ ಬ್ಯಾಂಕ್ನ ಉನ್ನತ ಹುದ್ದೆಯತ್ತ ಗಮನ ಹರಿಸಿದ್ದಾರೆ ಎನ್ನಲಾಗಿದೆ.
ಈಗ ಡಿ ಕೆ ಶಿವಕುಮಾರ್ ಅವರು ರಾಜಣ್ಣ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಅಡೆತಡೆ ಇಲ್ಲದೆ ಸ್ಪರ್ಧಿಸಲು ಅವಕಾಶ ನೀಡುತ್ತಾರೆಯೇ ಅಥವಾ ತಮ್ಮ ಬಣದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಆಡಳಿತಾರೂಢ ಕಾಂಗ್ರೆಸ್ನಲ್ಲಿ ಬಿರುಸಿನ ಚರ್ಚೆಗಳು ಆರಂಭವಾಗಿವೆ.
ರಾಜಣ್ಣ ಅವರು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ, ಈ ಭೇಟಿಗೆ ಯಾವುದೇ ರಾಜಕೀಯ ಮಹತ್ವವಿಲ್ಲ ಎಂದು ಅವರು ಹೇಳಿದ್ದಾರೆ.
ಈ ಭೇಟಿಗೆ ಯಾವುದೇ ವಿಶೇಷ ಮಹತ್ವವಿಲ್ಲ. ಪರಮೇಶ್ವರ ಅವರು ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಜಿಲ್ಲೆಯ ವಿಚಾರಗಳಿಗೆ ಸಂಬಂಧಿಸಿದಂತೆ ನಾವು ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದರು.
ಡಿ ಕೆ ಶಿವಕುಮಾರ್ ಅವರೊಂದಿಗೆ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, ತಮಗೆ ಯಾರ ಬಗ್ಗೆಯೂ ಅಸಮಾಧಾನವಿಲ್ಲ. ಎಲ್ಲರೂ ತಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದರು. ಚುನಾವಣೆಗೆ ಸಂಬಂಧಿಸಿದ ನೊಟೀಸ್ ಗಳನ್ನು ಎಲ್ಲ ನಿರ್ದೇಶಕರಿಗೂ ನೀಡಲಾಗುವುದು. ನೊಟೀಸ್ ಸ್ವೀಕರಿಸಿದ ಬಳಿಕ ಈ ಕುರಿತು ಮಾತನಾಡುವುದಾಗಿ ತಿಳಿಸಿದರು.
ಈ ಮಧ್ಯೆ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಪೆಕ್ಸ್ ಬ್ಯಾಂಕ್ನ ಉನ್ನತ ಹುದ್ದೆಗಳಿಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಲು ಸೆಪ್ಟೆಂಬರ್ 9ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸಭೆ ನಡೆಸಲಿದೆ ಎಂದು ತಿಳಿಸಿದ್ದಾರೆ. ನಿನ್ನೆ ಸವದಿ ಅವರು ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೂ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಸವದಿ ಹೇಳಿದ್ದಾರೆ.
ಅಪೆಕ್ಸ್ ಬ್ಯಾಂಕ್ನ ಸಿಇಒ ಹುದ್ದೆ ಪಡೆಯುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆ.ಎನ್. ರಾಜಣ್ಣ ಅವರ ಬಣದ ಅಧಿಕಾರಿಗಳ ನಡುವಿನ ಪೈಪೋಟಿ ಮುಂದುವರಿದಿದೆ.
ಕೆಲವು ಸಮಯದ ಹಿಂದೆ ಮುಖ್ಯಮಂತ್ರಿ ಅವರು ಹೊರಡಿಸಿದ್ದ ಆದೇಶದ ಮೂಲಕ ಸಿಎನ್. ದೇವರಾಜು ಅವರನ್ನು ಸಿಇಒ ಹುದ್ದೆಯಿಂದ ಬದಲಿಸಿ ಎ.ಸಿ. ದಿವಾಕರ ಅವರನ್ನು ನೇಮಿಸಲಾಗಿತ್ತು. ಇದನ್ನು ಪ್ರಶ್ನಿಸಿ ದೇವರಾಜು ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಆಗಸ್ಟ್ 24ರಂದು ನೀಡಿದ ತೀರ್ಪಿನಲ್ಲಿ ಹೈಕೋರ್ಟ್ ಜೂನ್ 9ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಅಲ್ಲದೆ, ದೇವರಾಜು ಅವರು 2027ರ ಜೂನ್ 10ರವರೆಗೆ ಅಥವಾ ಅವರ ಅಧಿಕಾರಾವಧಿ ಮುಕ್ತಾಯವಾಗುವವರೆಗೆ—ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ—ಸಿಇಒ ಆಗಿ ಮುಂದುವರಿಯಬೇಕು ಎಂದು ನಿರ್ದೇಶಿಸಿದೆ.
ಆದರೆ, ಹೈಕೋರ್ಟ್ನ ಈ ತೀರ್ಪಿನ ವಿರುದ್ಧ ಅಪೆಕ್ಸ್ ಬ್ಯಾಂಕ್ ವಿಭಾಗೀಯ ಪೀಠದ ಮೊರೆ ಹೋಗಿದೆ ಎಂದು ಆಡಳಿತಾಧಿಕಾರಿ ಶೆಟ್ಟಣ್ಣನವರ್ ತಿಳಿಸಿದ್ದಾರೆ.