

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ 10 ದಿನಗಳ 'ಬಳ್ಳಾರಿ ಚಲೋ' ಪಾದಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶನಿವಾರ ಮತ್ತೊಂದು ಘೋಷಿಸಿದ್ದಾರೆ.
ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ'ನ ಮೊದಲ ಎರಡು ಚರಣಗಳನ್ನು ಮಾತ್ರವೇ ಹಾಡಲು ಅಧಿಕೃತ ಆದೇಶ ಹೊರಡಿಸಿದೆ.
ಇದೀಗ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಮತ್ತು ಸಂಪೂರ್ಣ ‘ವಂದೇ ಮಾತರಂ’ಗಾಗಿ ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರದ ವಂದೇ ಮಾತರಂ ದ್ವಂದ್ವದ ವಿರುದ್ಧ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಒಂದೊಂದು ಕಿ.ಮೀ. ಪಾದಯಾತ್ರೆ ನಡೆಸಿ ತಹಸೀಲ್ದಾರ್ ಭೇಟಿಯಾಗಿ ಹಕ್ಕೊತ್ತಾಯ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ಈ ಪಾದಯಾತ್ರೆಯ ಮೂಲಕ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂಬ ಆಗ್ರಹವನ್ನು ಮುಂದಿಡಲಿದ್ದೇವೆ ಎಂದರು.
ಎಲ್ಲ ಆರು ಚರಣಗಳನ್ನು ಹಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇಲ್ಲಿನ ಸರ್ಕಾರ, ಮುಖ್ಯಮಂತ್ರಿಗಳು ಕೇವಲ ಎರಡು ಚರಣಗಳನ್ನು ಹಾಡಿದರೆ ಸಾಕೆಂದು ತೀರ್ಮಾನಿಸಿದ್ದು, ದುರ್ದೈವ. ಅಲ್ಪಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಈ ರೀತಿ ನಿರ್ಧಾರ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಆರು ಚರಣ ಹಾಡುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಗಳಿಂದ ಡಿ.ಕೆ.ಶಿವಕುಮಾರ್ ಅವರು ಪಾಠ ಕಲಿಯಲಿ ಎಂದರು.