

ಬೆಂಗಳೂರು: ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಪಕ್ಷದ ನಿಲುವಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಂದೇ ಮಾತರಂ ಗೀತೆ ಗಾಯನವನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷಗಳು ಟೀಕಿಸಿರುವ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ರಾಷ್ಟ್ರ ಗೀತೆಗೆ ಸಂಬಂಧಿಸಿದ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದರು.
ವಂದೇ ಮಾತರಂ ವಿಚಾರದಲ್ಲಿ ನಮ್ಮ ಪಕ್ಷ ಬಹಳ ಹಿಂದಿನಿಂದಲೂ ಹೊಂದಿರುವ ನಿಲುವನ್ನೇ ನಾವು ಅನುಸರಿಸಿದ್ದೇವೆ. ಬಿಜೆಪಿಯವರು ತಮ್ಮ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ವಂದೇ ಮಾತರಂ ನ್ನು ಗೌರವಿಸುತ್ತೇವೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ದೇಶಕ್ಕೆ ತಂದವರು ನಾವೇ ಎಂದು ಹೇಳಿದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಿಸಿದೆ. ಆದರೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.
ಜನವರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು, ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ವಂದೇ ಮಾತರಂ ಎರಡನ್ನೂ ಒಟ್ಟಿಗೆ ಹಾಡುವ ಸಂದರ್ಭದಲ್ಲಿ, ರಾಷ್ಟ್ರಗೀತೆಗೆ ಮೊದಲು ವಂದೇ ಮಾತರಂನ ಎಲ್ಲ ಆರು ಚರಣಗಳನ್ನು ಹಾಡುವಂತೆ ನಿರ್ದೇಶಿಸಿತ್ತು.
ವಂದೇ ಮಾತರಂನ 150ನೇ ವರ್ಷಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಈ ನಿರ್ದೇಶನ ಹೊರಡಿಸಿತ್ತು. ಆದರೆ, ಆಗಸ್ಟ್ 19ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ವಂದೇ ಮಾತರಂ ಕುರಿತು 1937ರಲ್ಲಿ ಅಂಗೀಕರಿಸಲಾದ ನಿರ್ಣಯವನ್ನೇ ಪಾಲಿಸಲು ನಿರ್ಧರಿಸಲಾಗಿತ್ತು. ಅದರಂತೆ, ಪಕ್ಷದ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ.
ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದ್ದು, ಇದನ್ನು “ತುಷ್ಟೀಕರಣದ ರಾಜಕೀಯ” ಎಂದು ಆರೋಪಿಸಿದೆ.