

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ, ಗ್ರಹಚಾರ ಬಿಡಿಸ್ತೇನೆ ಎಂದು ಎಚ್ಚರಿಕೆ ನೀಡಿದ್ದು, ಆಡಳಿರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಕೆಪಿಎಸ್ಸಿ ಹಗರಣದ ತನಿಖೆ ತೀವ್ರಗೊಂಡರೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಭಾನುವಾರ ತಿರುಗೇಟು ನೀಡಿದ್ದಾರೆ.
ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ, ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಮತ್ತೊಂದು ಎಫ್ಐಆರ್ ದಾಖಲಿಸಿದರೂ ನಾನು ಹೆದರುವುದಿಲ್ಲ ಎಂದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್ಸಿ ಹಗರಣದ ಬಗ್ಗೆ ಮಾತನಾಡಿದ ನಂತರ ಪ್ರಿಯಾಂಕ್ ಖರ್ಗೆಗೆ ಕನಸಿನಲ್ಲೂ ಪರಪ್ಪನ ಅಗ್ರಹಾರವೇ ಕಾಣುತ್ತಿದೆ. ಆ ಭೀತಿಯಿಂದಲೇ ಅವರು ಪದೇ ಪದೇ ಜೈಲಿನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ನನ್ನ ಮೇಲೆ ಈಗಾಗಲೇ 21 ಎಫ್ಐಆರ್ಗಳಿವೆ. ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ವಿಚಾರಕ್ಕಾಗಿ ನನ್ನ ಮೇಲೆ ಮತ್ತೊಂದು ಕೇಸ್ ಹಾಕಿ ಜೈಲಿಗೆ ಕಳುಹಿಸಿದರೂ ನನಗೇನೂ ಬೇಸರವಿಲ್ಲ. ನಾನು ಯಾವುದಕ್ಕೂ ಜಗ್ಗುವ ಅಥವಾ ಹೆದರುವ ವ್ಯಕ್ತಿಯಲ್ಲ ಎಂದರು.
ಪ್ರಿಯಾಂಕ್ ಖರ್ಗೆ ಮಾತುಗಳು ‘ಭೂತದ ಬಾಯಲ್ಲಿ ಭಗವದ್ಗೀತೆ’ ಬಂದಂತಿದೆ. ಡಿ.ಜೆ. ಹಳ್ಳಿ ಹಾಗೂ ಕೆ.ಜೆ. ಹಳ್ಳಿ ಗಲಭೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಮೇಲಿನ ಕೇಸ್ಗಳನ್ನು ವಾಪಸ್ ಪಡೆದಿದ್ದು ಕಾಂಗ್ರೆಸ್ ಸರ್ಕಾರ. ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿ ಜೈಲು ಸೇರಿದ್ದವರನ್ನು ಪರಪ್ಪನ ಅಗ್ರಹಾರದಿಂದ ಹೊರತಂದ ಇತಿಹಾಸ ಕಾಂಗ್ರೆಸ್ಗಿದೆ ಎಂದು ತಿರುಗೇಟು ನೀಡಿದರು.