

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ, ನಾನು ಇನ್ನೆಲ್ಲಿಗೆ ಹೋಗಲಿ, ಇಲ್ಲಿನ ಜನರನ್ನೇ ನಂಬಿದ್ದೇನೆ, ರಾಮನಗರದಿಂದ ಸ್ಪರ್ಧಿಸುವುದು ಖಚಿತ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.
ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ, ಉತ್ತಮ ಫಲಿತಾಂಶ ನೀಡುವ ಮೂಲಕ ಅದನ್ನು ಹೋಗಲಾಡಿಸಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಬೇಕಿದೆ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದು ಎಂದಿದ್ದಾರೆ.
ಇನ್ನೂ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬರುವ ಸಂಬಂಧ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಣ್ಣನಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದ್ದಾರೆ. ಹೀಗಾಗಿ ಅವರು ಯಾವ ಸಂದರ್ಭದಲ್ಲಿ ವಾಪಸ್ ಬರಬೇಕು ಎನ್ನುವ ಸಂಬಂಧ ಬಿಜೆಪಿ ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.