

ಬೆಂಗಳೂರು: ಯಾರಾದರೂ ಒಬ್ಬ ಸೀರಿಯಸ್ ರಾಜಕಾರಣಿ ದೇಶ ಅಲ್ಲೋಲ ಕಲ್ಲೋಲ ಆಗುತ್ತೆ ಅನ್ನುವ ವಿಚಾರ ಇದ್ದರೆ ಅಮೆರಿಕಾ ಇಂಪಾರ್ಟೆಂಟ್ ಆಗಲ್ಲ ಬಿಡಿ ಎಂದು ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸಚಿವ ಕುಮಾರ ಸ್ವಾಮಿ ಅಲ್ಲೋಲ ಕಲ್ಲೋಲ ಹೇಳಿಕೆಗೆ ಪ್ರತಿಕ್ರಿಯಿಸಿ ಯಾಕೆ ಸುಮ್ಮನೆ ಮಾತಾಡೋದು ಎಂದರು.
ಇನ್ನೂ ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗಣೇಶನನ್ನು ವಿಘ್ನ ವಿನಾಶಕ ಎಂದು ಹೇಳುತ್ತಾರೆ. ಆತನನ್ನು ಪೂಜೆ ಮಾಡಿ ರಾಜ್ಯಕ್ಕೆ ಒಳ್ಳೆಯದಾಗಬೇಕು ಎಂದು ಬೇಡಿಕೊಳ್ಳಬೇಕು. ಆದರೆ ಬಿಜೆಪಿಯವರು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ.
ರಾಜಕೀಯಕ್ಕಾಗಿ , ಕೋಮು ಗಲಭೆಗೆ ಬಳಸಿಕೊಳ್ಳಬಾರದು. ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರೆ ಯಾವುದೇ ಪ್ರಯೋಜನವಾಗುವುದಿಲ್ಲ, ಅಶೋಕ್ ಗೆ ದೇವರು ಒಳ್ಳೆಯ ಬುದ್ದಿ ನೀಡಲಿ ಎಂದರು.
ಇನ್ನೂ ಇದಕ್ಕೂ ಮುನ್ನ ನಗರದ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಂಗಣದಲ್ಲಿ ಬುಧವಾರ ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಕಾವೇರಿ ನೀರಾವರಿ ನಿಗಮ ವ್ಯಾಪ್ತಿ ಯೋಜನೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಕುರಿತಂತೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕಾರ್ಯೋನ್ಮುಖರಾಗಬೇಕು.
ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು, ಫೀಲ್ಡಿಗಿಳಿದು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಕೆಲಸ ಮಾಡದ ಅಧಿಕಾರಿಗಳು ಶಿಸ್ತು ಕ್ರಮ ಎದುರಿಸಲು ಸಿದ್ದರಾಗಬೇಕು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಚಿವರು, 5 ವರ್ಷಗಳಲ್ಲಿ ಸುಮಾರು 112.88 ಟಿಎಂಸಿ ಹೆಚ್ಚುವರಿ ಕಾವೇರಿ ನೀರು ಸಮುದ್ರ ಪಾಲಾಗಿದೆ. ಹೀಗಾಗಿ ಬರಗಾಲದಲ್ಲೂ ಎರಡು ರಾಜ್ಯಗಳಿಗೆ ಅನುಕೂಲವಾಗುವ ಹಾಗೂ ಕನಿಷ್ಠ 22 ಟಿಎಂಸಿ ಕುಡಿಯುವ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯೊಂದೇ ಶಾಶ್ವತ ಪರಿಹಾರವಾಗಿದೆ ಎಂದರು.