

ಬೆಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿರುವುದನ್ನು ಬಿಜೆಪಿ ಟೀಕಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆಸಿದ್ದ ಸಚಿವ ಸಂಪುಟ ಸಭೆಯಂತೆಯೇ ಇದೂ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದೆ.
ಶುಕ್ರವಾರ ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಏನಾದರೂ ಸಾಧನೆ ಮಾಡುತ್ತೇವೆ ಎಂಬ ಭಾವನೆಯೊಂದಿಗೆ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿದೆ. ಆದರೆ, ಇದು ಕರಾವಳಿ ಭಾಗಕ್ಕೆ ಯಾವುದೇ ಯೋಜನೆಗಳು ತಲುಪುವುದಿಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ 5,000–6,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಘೋಷಿಸಿದ್ದರು. ಆದರೆ, ಯಾವುದೂ ಕಾರ್ಯರೂಪಕ್ಕೆ ಬರಲಿಲ್ಲ. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿನ ರೆಸಾರ್ಟ್ಗೆ ತೆರಳಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಇದೂ ಜನರನ್ನು ದಾರಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಲಿದೆ ಎಂದು ಟೀಕಿಸಿದರು.
ಸರ್ಕಾರದ ಬಳಿ ಹಣವಿದ್ದರೆ ಸಾಲ ಮಾಡದೆ ಬಜೆಟ್ ಮಂಡಿಸುತ್ತೇವೆ ಎಂದು ಹೇಳಲಿ. ಈ ಬಾರಿ 1.5 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್ ಮಂಡಿಸಿದ್ದಾರೆ. ಅದರ ಮೇಲಿನ ಬಡ್ಡಿಯನ್ನೂ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಿಂದ ಏನು ಪ್ರಯೋಜನವಾಯಿತು ಎಂಬುದನ್ನು ಸರ್ಕಾರ ಹೇಳಬೇಕು. ಈ ಬಾರಿಯೂ ಘೋಷಣೆಗಳು ಕಾಗದದ ಮೇಲೆಯೇ ಉಳಿಯಲಿವೆ” ಎಂದು ಟೀಕಿಸಿದರು.
ಇದೇ ವೇಳೆ ಸಾರಿಗೆ ನಿಗಮಗಳಿಗೆ ರೂ.5,000 ಕೋಟಿ ಅಗತ್ಯವಿದ್ದು, ನೌಕರರಿಗೆ ವೇತನವನ್ನೂ ಪಾವತಿಸಲಾಗಿಲ್ಲ ಎಂದು ಅವರು ಆರೋಪಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳವೂ ಆಗಿಲ್ಲ. ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಬರಗಾಲದ ಬಗ್ಗೆ ಒಂದರ ಹಿಂದೆ ಮತ್ತೊಂದು ಘೋಷಣೆ ಮಾಡಲಾಗುತ್ತಿದೆ. ಕೊನೆಗೆ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕಳುಹಿಸುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.