ಬೆಂಗಳೂರು: ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆಯುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಶುಕ್ರವಾರ ಪ್ರಕಟಿಸಿದ್ದಾರೆ.
ಸಾಹಿತಿ ದೇವನೂರು ಮಹಾದೇವ ಅವರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬರಗೂರು ರಾಮಚಂದ್ರಪ್ಪ, ಹಂಪ ನಾಗರಾಜಯ್ಯ, ಪಿ.ವಿ.ವೆಂಕಟಾಚಲ ಶಾಸ್ತ್ರೀ ಅವರ ಹೆಸರುಗಳು ಸಹ ಕೇಳಿಬಂದಿತ್ತು.
ಸಿದ್ದಲಿಂಗಯ್ಯ ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಮುಂದಿನ ವರ್ಷ ಫೆಬ್ರುವರಿ 1ರಿಂದ 3ರವರೆಗೆ ನಡೆಯುವ ಸಾಹಿತ್ಯ ಸಮ್ಮೇಳನ, ನಾಡು ನುಡಿ ಸಂಸ್ಕೃತಿ ಬಗ್ಗೆ ಚಿಂತನೆ ನಡೆಸುವ ಅತಿ ದೊಡ್ಡ ಸಮಾವೇಶ. ಚರ್ಚಾಗೋಷ್ಠಿ, ಕವಿತಾ ವಾಚನ, ಸಾಹಿತ್ಯ ಮಂಥನ, ಪುಸ್ತಕ ಪ್ರದರ್ಶನ ಹಾಗೂ ಪ್ರಾದೇಶಿಕ ಭೋಜನದ ಉಚಿತ ವ್ಯವಸ್ಥೆ ಮುಂತಾದವುಗಳನ್ನು ಒಳಗೊಂಡ ಸಮ್ಮೇಳನ ಪ್ರತಿ ವರ್ಷ ಲಕ್ಷಾಂತರ ಜನರನ್ನು ಆಕರ್ಷಿಸುತ್ತದೆ.
Advertisement