ಕುವೆಂಪು ಮಾರ್ಗದಲ್ಲಿ ನಡೆದ ಕನ್ನಡ ಸಾರಸ್ವತ ಲೋಕದ ನಕ್ಷತ್ರ ‘ಕೋಚೆ’

ರಾಷ್ಟ್ರಕವಿ ಕುವೆಂಪು ಅವರ ಶಿಷ್ಯ, ನೇರ ನಡೆ ನುಡಿಯ ವ್ಯಕ್ತಿತ್ವ, ಸಮಾಜದ ಆಗುಹೋಗುಗಳಿಗೆ ಸ್ಪಂದಿಸುವ ಸ್ವಭಾವದ ಕೋ. ಚೆನ್ನಬಸಪ್ಪ ಎಂಬ ಸಾರಸ್ವತ ಲೋಕದ ನಕ್ಷತ್ರ ಕಳಚಿದೆ.
ಕೋಚೆ
ಕೋಚೆ
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಶಿಷ್ಯ, ನೇರ ನಡೆ ನುಡಿಯ ವ್ಯಕ್ತಿತ್ವ, ಸಮಾಜದ ಆಗುಹೋಗುಗಳಿಗೆ ಸ್ಪಂದಿಸುವ ಸ್ವಭಾವದ ಕೋ. ಚೆನ್ನಬಸಪ್ಪ ಎಂಬ ಸಾರಸ್ವತ ಲೋಕದ ನಕ್ಷತ್ರ ಕಳಚಿದೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಸಮೀಪದ ಆಲೂರು ಗ್ರಾಮದಲ್ಲಿ 1922 ರ ಫೆಬ್ರುವರಿ 21ರಂದು ಬಸಮ್ಮ ಕೋಣನ ವೀರಣ್ಣ  ದಂಪತಿಯ ಪುತ್ರ ಕೋ.ಚೆನ್ನಬಸಪ್ಪ. ನಿವೃತ್ತ ನ್ಯಾಯಾಧಿಶರಾದ ಇವರು ಕಾನಮಡುಗು ಹಳ್ಳಿಯಲ್ಲಿ ಪ್ರೈಮರಿ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ  ನಂತರ ಪ್ರೌಢಶಾಲೆಗೆ ಬಳ್ಳಾರಿ, ನಂತರ ಕಾಲೇಜು ವಿದ್ಯಾಭ್ಯಾಸ ಅನಂತಪುರದಲ್ಲಿ ನಡೆಸಿದರು. 

ಆಗ ದೇಶಕ್ಕೆ ಹಬ್ಬಿದ್ದ ಸ್ವಾತಂತ್ರ್ಯದ ಬಿಸಿ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಭಾಗಿಯಾಗಿ ಬಂಧನ, ಸೆರೆಮನೆವಾಸ ಅನುಭವಿಸಿದರು. ಬಿಡುಗಡೆಯ ನಂತರ ಬಿ.ಎ. ಪದವಿ, ಬೆಳಗಾವಿ ಕಾಲೇಜಿನಿಂದ ಲಾ ಪದವಿ. ಚರಿತ್ರೆ ಮತ್ತು ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಕೂಡ ಪಡೆದರು. 

ಮುಂಬಯಿ ಹೈಕೋರ್ಟಿನಲ್ಲಿ 1946ರಲ್ಲಿ  ವಕೀಲರಾಗಿ ನೋಂದಣಿಗೊಂಡು, ಬಳ್ಳಾರಿ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲಿ ವೃತ್ತಿ ಆರಂಭಿಸಿ 1965 ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ನೇಮಕವಾದರು. ನಿವೃತ್ತಿಯ ನಂತರ ಪುನಃ ಕರ್ನಾಟಕ ಹೈಕೋರ್ಟಿನಲ್ಲಿ ವಕೀಲಿ ವೃತ್ತಿ. ಹಲವಾರು ಕಾರ್ಮಿಕ ಸಂಘಗಳ, ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಅಧ್ಯಕ್ಷರ ಜವಾಬ್ದಾರಿ ನಿರ್ವಹಿಸಿದರು.

1971ರಿಂದ  ಅರವಿಂದಾಶ್ರಮದ ಒಡನಾಟ ಇರಿಸಿಕೊಂಡಿದ್ದ ‘ಕೋಚೆ. ಕರ್ನಾಟಕ ವಿಭಾಗದ ಅರವಿಂದಾಶ್ರಮ ಪ್ರಾರಂಭ ಮಾಡಿದರು. ಅಮೆರಿಕದಲ್ಲಿ ನಡೆದ ವೀರಶೈವ ವಾರ್ಷಿಕ ಅವೇಶನ, ಅರವಿಂದಾಶ್ರಮದ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ಬರೆದ ಲೇಖನಗಳು ನಾಡಿನ ಎಲ್ಲ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡವು. 

ಕನ್ನಡಪ್ರಭ ಪತ್ರಿಕೆಯಲ್ಲಿ "ನ್ಯಾಯಾಧಿಶರ ನೆನಪುಗಳು" ಮತ್ತು ಪ್ರಜಾಮತ ವಾರಪತ್ರಿಕೆಯಲ್ಲಿ "ನ್ಯಾಯಾಲಯದಲ್ಲಿ ಸತ್ಯ ಕಥೆಗಳು" ಎಂಬ ಇವರ ಅಂಕಣಗಳು  ಜನಪ್ರಿಯತೆ ಗಳಿಸಿದವು. ಸುಮಾರು 80 ಕ್ಕೂ ಹೆಚ್ಚು ಕೃತಿಗಳನ್ನೂ ಇವರು ಪ್ರಕಟಿಸಿದ್ದಾರೆ.

ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಮೊದಲಾದ 5  ಕವನ ಸಂಕಲನಗಳು. ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಮುಂತಾದ 6 ಕಥಾ ಸಂಕಲನಗಳು. ಹಿಂದಿರುಗಿ ಬರಲಿಲ್ಲ, ನೊಗದ ನೇಣು, ರಕ್ತತರ್ಪಣ, ಬೇಡಿ ಕಳಚಿತು-ದೇಶ ಒಡೆಯಿತು ಮೊದಲಾದ 9 ಕಾದಂಬರಿಗಳು. ಶ್ರೀ ಅರವಿಂದರು, ಶ್ರೀ ಮಾತಾಜಿ, ಶ್ರೀ ಮೃತ್ಯುಂಜಯಸ್ವಾಮಿಗಳು ಮೊದಲಾದ 8 ಜೀವನಚರಿತ್ರೆಗಳು. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ದೃಢಪ್ರತಿಜ್ಞೆ, ಕುವೆಂಪು ವೈಚಾರಿಕತೆ ಮೊದಲಾದ ವಿಮರ್ಶಾ ಗ್ರಂಥಗಳು. ರಕ್ಷಾಶತಕಂ, ಶ್ರೀ ಕುವೆಂಪು ಭಾಷಣಗಳು, ಬಿನ್ನವತ್ತಳೆಗಳು ಸಂಪಾದಿತ ಕೃತಿಗಳಾಗಿವೆ.

79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕೋಚೆ, ನಾಡೋಜ ಪದವಿಗೆ ಪಾತ್ರರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com