
ಬೆಳಗಾವಿ: ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ. ಪ್ರತಿಪಕ್ಷ ಬಿಜೆಪಿ ಸದಸ್ಯರ ಧರಣಿಯ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಇಂದು ಬೆಳಗ್ಗೆ ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ ಸಚಿವರ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ರೈತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಜೆಡಿಎಸ್ ಶಾಸಕರು ಆಗ್ರಹಿಸಿದರು. ಆದರೆ, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಯಾವುದಕ್ಕೂ ಅವಕಾಶ ನೀಡದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಇನ್ನು ವಿಧಾನ ಪರಿಷತ್ತಿನಲ್ಲೂ ಬಿಜೆಪಿ ಕಳಂಕಿತ ಸಚಿವರ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಪ್ರತಿಪಕ್ಷಗಳ ಗದ್ದಲದ ನಡುವೆಯೂ ಕರ್ನಾಟಕ ಮರಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2014, ಗೋಹತ್ಯೆ ನಿಷೇಧ ಹಿಂಪೆಡಯುವ ವಿಧೇಯಕ ಹಾಗೂ ಕರ್ನಾಟಕ ಸ್ಟ್ಯಾಂಪ್ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸಹ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಬಳಿಕ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಕಲಾಪವನ್ನು ಹಾಳು ಮಾಡಿದ್ದೀರಿ, ನಿಮಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದ ಸಿಎಂ, ಬಿಜೆಪಿಯವರೇ ಭ್ರಷ್ಟಾಚಾರದ ನಿರ್ಮಾತೃಗಳು, ಬಿಜೆಪಿಯ ಏಳು ನಾಯಕರು ಜೈಲು ಹೋಗಿ ಬಂದಿದ್ದಾರೆ ಎಂದರು.
ಇನ್ನು ಸರ್ಕಾರದ ವಿರುದ್ಧ ಹರಿಹಾಯ್ದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ನಾವು ಈ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ ಆದರೆ ಭ್ರಷ್ಟ ಸಚಿವರ ಬಗ್ಗೆ ಚರ್ಚೆಗೆ ಅವಕಾಶ ಸಿಗದಿರುವುದು ಬೇಸರ ತಂದಿದೆ ಎಂದರು. ಅಲ್ಲದೆ ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ಆರೋಪಿಸಿದರು.
ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ
ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ತುಂಬಾ ನಿರೀಕ್ಷೆಯಿಂದ ಅಧಿವೇಶನ ಆರಂಭಿಸಿದ್ದೇವು. ಆದರೆ ನಿರೀಕ್ಷೆಯಷ್ಟು ಅಧಿವೇಶನ ಯಶಸ್ವಿಯಾಗಿಲ್ಲ. ಶೇ.60ರಷ್ಟು ತೃಪ್ತಿ ತಂದಿದೆ ಎಂದು ಹೇಳಿದರು. ಅಲ್ಲದೆ ನಾನು ಹಿರಿಯನಿದ್ದೇನೆ, ಸಾಕಷ್ಟು ಅನುಭವ ಇದೆ. ಹೀಗಾಗಿ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿದ್ದೇನೆ ಎಂದರು.
Advertisement