ರಾಜ್ಯ ಸರ್ಕಾರದಿಂದ ಷರತ್ತು: ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ತನಿಖೆಗೆ ನಿರಾಕರಿಸಿದ ಸಿಬಿಐ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಸಿಬಿಐ....
ಡಿ.ಕೆ.ರವಿ
ಡಿ.ಕೆ.ರವಿ
Updated on

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣದ ತನಿಖೆ ನಡೆಸಲು ನಿರಾಕರಿಸಿದೆ.

ಸಾಕಷ್ಟು ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ರಾಜ್ಯ ಸರ್ಕಾರ, ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸ ಎಂಬ ಷರತ್ತಿನೊಂದಿಗೆ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿದೆ.

ರಾಜ್ಯ ಸರ್ಕಾರದ ಷರತ್ತುಬದ್ಧ ಅಧಿಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಯಾವ ಉದ್ದೇಶದಿಂದ ಸರ್ಕಾರ ಷರತ್ತು ವಿಧಿಸಿದೆ ಎಂದು ಪ್ರಶ್ನಿಸಿದ್ದಾರೆ.

ಬಹುಷ ರಾಜ್ಯ ಸರ್ಕಾರಕ್ಕೆ ಈ ಪ್ರಕರಣದಲ್ಲಿ ಸತ್ಯ ಹೊರಬರುವುದು ಬೇಕಾಗಿಲ್ಲ ಅಂತ ಕಾಣಿಸುತ್ತದೆ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು  ಮೂರು ತಿಂಗಳಿನಲ್ಲಿ ತನಿಖಾ ವರದಿ ನೀಡುವಂತೆ ರಾಜ್ಯ ಸರ್ಕಾರ ಸಿಬಿಐಗೆ ಷರತ್ತು ವಿಧಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ರವಿ ಸಾವಿನ ಪ್ರಕರಣ ಅತೀ ಸೂಕ್ಷ್ಮವಾಗಿದ್ದು, ಈ ಪ್ರಕರಣವನ್ನು ಸಿಬಿಐ ಹಲವು ಆಯಾಮಗಳಲ್ಲಿ ತನಿಖೆ ನಡೆಸಬೇಕಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐಗೆ ಷರತ್ತು ವಿಧಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com