ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಬ್ಬರಕ್ಕೆ ಕಾಂಗ್ರೆಸ್ ಧೂಳಿಪಟವಾಗಿದ್ದು, ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಾಕೇನ್ ಅವರು ರಾಜಿನಾಮೆ ನೀಡಿದ್ದಾರೆ.
ದೆಹಲಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಅಜಯ್ ಮಾಕೇನ್ ಅವರು ಇಂದು ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ.
ಫಲಿತಾಂಶದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಾಕೇನ್, 'ದಿಗ್ವಿಜಯ ಸಾಧಿಸಿದ ಎಎಪಿಯನ್ನು ನಾನು ಅಭಿನಂದಿಸುತ್ತೇನೆ ಮತ್ತು ಜನರ ತೀರ್ಪುನ್ನು ಗೌರವಿಸುತ್ತೇನೆ. ಎಎಪಿ ತಾನು ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂಬ ವಿಶ್ವಾಸವಿದೆ. ನನ್ನ ಮತ್ತು ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ರಾಜಿನಾಮೆ ನೀಡುತ್ತಿದ್ದೇನೆ' ಎಂದಿದ್ದಾರೆ. ನನ್ನ ನೇತೃತ್ವದಲ್ಲೇ ಚುನಾವಣೆ ಎದುರಿಸಿದರೂ, ಕನಿಷ್ಠ ನಾನು ಸ್ಪರ್ಧಿಸದ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಾಜಿನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಸಹ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
Advertisement