ಬೆಂಗಳೂರು: ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ಮಂಗಳವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ವಿರೋಧದ ನಡುವೆಯೂ ಪರಿಷತ್ನಲ್ಲಿ ಸೋತಿದ್ದ ಬಿಬಿಎಂಪಿ ವಿಭಜನೆಯ ಪಾಲಿಕೆಗಳ ತಿದ್ದಪಡಿ ವಿಧೇಯಕವನ್ನು ಇಂದು ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.
ಈಗ ಇದನ್ನೇ ಪ್ರಮಾಣ ಪತ್ರದ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿ ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರ ಅವಕಾಶ ಕೇಳುವುದಕ್ಕೆ ಅವಕಾಶವಿದೆ. ಆದರೆ, ಈ ಪ್ರಯತ್ನಗಳು ಸರ್ಕಾರಕ್ಕೆ ಎಷ್ಟರ ಮಟ್ಟಿಗೆ ಫಲ ನೀಡುತ್ತವೆ ಎನ್ನುವುದು ಖಾತರಿ ಇಲ್ಲ.
ಈ ಹಿಂದೆ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕಾರ ಪಡೆದಿದ್ದ ಬಿಬಿಎಂಪಿ ವಿಭಜಿಸುವ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಸೋಲು ಉಂಟಾಗಿತ್ತು.
ವಿಧೇಯಕಕ್ಕೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ ಬಿಜೆಪಿ, ಇದೀಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಸಹಿ ಹಾಕದಂತೆ ಮನವಿ ಮಾಡಲು ನಿರ್ಧರಿಸಿದೆ.
Advertisement