ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿ ಕಚೇರಿಯ 7 ಸಿಬ್ಬಂದಿಯನ್ನು ವಿಚಾರಣೆ ಒಳಪಡಿಸಿದ್ದಾರೆ.
ರವಿ ಅವರು ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಕಚೇರಿಯಲ್ಲಿ ಕೆಲಸ ಮಾಡಿದ್ದ ಆಪ್ತ ಸಹಾಯಕ ವೆಂಕಣ್ಣ, ಜವಾನ ರಫೀಕ್, ಕಂಪ್ಯೂಟರ್ ಆಪರೇಟರ್
ಖಲೀಲ್, ಕಾರು ಚಾಲಕ ಮಾರುತಿ, ಗನ್ ಮ್ಯಾನ್ ಸಂತೋಷ್, ಗುಮಾಸ್ತರಾದ ಗುರಪ್ಪ ಹಾಗೂ ಧರ್ಮೇಶ ಪ್ರಸಾದ ಅವರನ್ನು ಡಿವೈಎಸ್ಪಿ ಕೃಷ್ಣಮೂರ್ತಿ ಅವರ ತಂಡ ವಿಚಾರಣೆ ನಡೆಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿದ್ದ ಒಟ್ಟು ಏಳು ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಎಲ್ಲಾ ಸಿಬ್ಬಂದಿ ವಿಚಾರಣೆಗೆ ಹಾಜರಾಗಿದ್ದರು. ಡಿ.ಕೆ. ರವಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಭೇಟಿ ಮಾಡಿದ್ದ ಅಧಿಕಾರಿ, ಸಿಬ್ಬಂದಿ ಹಾಗೂ ಖಾಸಗಿ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ.
Advertisement