
ನವದೆಹಲಿ: ಕರ್ನಾಟಕದ ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐ ಅಧಿಕಾರಿಗಳಿಗೆ ವಹಿಸಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಲಹೆ ರಾಜ್ಯಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ನಿಗೂಢ ಸಾವಿನ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಸಲಹೆ ಕೂಡ ನಿಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ರಾಜನಾಥ್ ಸಿಂಗ್ ಅವರ ಸಲಹೆಯನ್ನು ನಯವಾಗಿ ತಿರಸ್ಕರಿಸಿರುವ ಸಿದ್ದರಾಮಯ್ಯ ಅವರು ಪ್ರಕರಣವನ್ನ ರಾಜ್ಯವೇ ನಿರ್ವಹಿಸಲಿದೆ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ರವಿ ನಿಗೂಢ ಸಾವು ಪ್ರಕರಣ ವಿಧಾನಸಭೆಯ ಇಂದಿನ ಕಲಾಪದಲ್ಲಿಯೂ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲೇ ಬೇಕು ಎಂದು ಪ್ರತಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಇದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದ್ದು, ತೀವ್ರ ಗದ್ದಲ ಮುಂದುವರೆದ ಪರಿಣಾಮ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕಲಾಪವನ್ನು ಮುಂದೂಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದು, ತಮ್ಮ ಶಾಸಕರ ಬಂಡವಾಳ ಬಹಿರಂಗವಾಗುತ್ತದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಮೊಂಡುತನವನ್ನು ಮುಂದುವರೆಸಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾದಯತ್ರೆ ಮಾಡುತ್ತೇನೆ: ಸಂಸದ ಯಡಿಯೂರಪ್ಪ ಘೋಷಣೆ
ಇನ್ನು ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿರುವ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತುಮಕೂರಿನ ದೊಡ್ಡಕೊಪ್ಪಲಿನಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಡಿಕೆ ರವಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ದೆಹಲಿಯ ಸಂಸತ್ ಭವನದ ಬಳಿ ಬಿಜೆಪಿ ಸಂಸದರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಯಡಿಯೂರಪ್ಪ ಅವರು, ನಿಷ್ಠಾವಂತ ಅಧಿಕಾರಿ ರವಿ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಸಿಬಿಐ ತನಿಖೆ ನಡೆಸವಲು ಮೀನಾಮೇಷ ಎಣಿಸುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಿಬಿಐ ತನಿಖೆಗೆ ವಹಿಸದಿದ್ದರೆ ಆತ್ಮಹತ್ಯೆ
ಇನ್ನು ಡಿಕೆ ರವಿ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆ ವಹಿಸದಿದ್ದರೆ ನಮ್ಮ ಕುಟುಂಬಸ್ಥರೆಲ್ಲರೂ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ರವಿ ಅವರ ಕುಟುಂಬ ವರ್ಗ ಹೇಳಿದೆ. ರವಿ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ, ಇದು ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ.ರವಿಯವರ ಚಾರಿತ್ರ್ಯ ಹರಣ ಮಾಡುವ ಕೆಲಸ ನಡೆಯುತ್ತಿದ್ದು, ಅಪಪ್ರಚಾರ ನಿಲ್ಲಬೇಕು ಎಂದು ಅವರು ಒತ್ತಾಯಿಸಿದರು. ಅಲ್ಲದೆ ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ. ಆದ್ದರಿಂದ ಸಿಬಿಐ ತನಿಖೆಯೇ ಆಗಬೇಕು. ಇವರು (ಸಿಐಡಿ) ಮಾಡುವ ತನಿಖೆ ಅವರೇ (ಸಿಬಿಐ) ಮಾಡಲಿ. ರಾಜ್ಯ ಸರ್ಕಾರದ ಬಗ್ಗೆ ನಮಗೆ ನಂಬಿಕೆಯಿಲ್ಲ ಎಂದು ಕುಟುಂಬದ ಸದಸ್ಯರು ಹೇಳಿದರು.
Advertisement