ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮಂಗಳವಾರ ವಿದ್ಯುಕ್ತ ಚಾಲನೆ ದೊರೆಯಲಿದೆ. ಚಾಮುಂಡಿ ¨ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಪಕ್ಕ ನಿರ್ಮಿಸಲಾಗಿರುವ ಬೃಹತ್ ವೇದಿಕೆಯಲ್ಲಿ ಉದ್ಘಾಟನೆ ನೆರವೇರಲಿದ್ದು, ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಬಳಿಕ ಬೆಳಗ್ಗೆ 11.05ರಿಂದ 11.55ರೊಳಗಿನ ಶುಭ ಧನುರ್ ಲಗ್ನದಲ್ಲಿ ಎಚ್.ಡಿ. ಕೋಟೆ ತಾಲೂಕು ಮಲಾರ ಕಾಲೋನಿಯ ಪ್ರಗತಿ ಪರ ರೈತ ಪುಟ್ಟಯ್ಯ ಚಾಲನೆ ನೀಡುವರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ, ಮುಜರಾಯಿ ಸಚಿವ ಟಿ.ಬಿ. ಜಯಚಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಶಾಸಕ ಜಿ.ಟಿ. ದೇವೇಗೌಡ ಉಪಸ್ಥಿತರಿರುವರು.
ಈ ಬಾರಿ ದಸರೆ ಅ.23 ರಂದು ಜಂಬೂಸವಾರಿಯೊಂದಿಗೆ ಮುಕ್ತಾಯವಾಗಲಿ ದೆ. ದೇಶ ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆದುಕೊಳ್ಳುವ ನಾಡಹಬ್ಬ ದಸರೆಗಾಗಿ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಸಾಮಾನ್ಯವಾಗಿ ದಸರೆ 9 ಅಥವಾ 10 ದಿನಗಳು ನಡೆಯುತ್ತದೆ. ಈ ಬಾರಿ 11 ದಿನಗಳು ನಡೆಯುತ್ತಿರುವುದು ವಿಶೇಷ.
Advertisement