ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ 30 ಲಕ್ಷ ರುಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಕಲ್ಲಪ್ಪ ಕುಟಂಬಕ್ಕೆ 30 ಲಕ್ಷ ರುಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಅಧಿವೇಶನದ ವೇಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದಿದ್ದರು. ಅಲ್ಲದೆ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದರು.
ಕಲ್ಲಪ್ಪ ಹಂಡಿಭಾಗ್ ಅವರು ತಮ್ಮ ಮೇಲೆ ಅಪಹರಣ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪ ಕೇಳಿಬಂದ ಕೂಡಲೇ ಮನನೊಂದು ಜುಲೈ 4ರಂದು ಆತ್ಮಹತ್ಯೆಗೆ ಶರಣಾಗಿದ್ದರು.