ಧಾರವಾಡ: ಅವಳಿ ನಗರ ಧಾರವಾಡದಲ್ಲಿ ನಿರ್ಮಿಸಲಾಗಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ.ಐ.ಟಿ)ಯಲ್ಲಿ ಕನ್ನಡಿಗರಿಗೆ ಶೇ. 25 ರಷ್ಟು ಸ್ಥಾನ ಮೀಸಲಾತಿ ನೀಡುವ ಕುರಿತು ಕೇಂದ್ರ ಸಚಿವ ಅನಂತ್ ಕುಮಾರ್ ಸುಳಿವು ನೀಡಿದ್ದಾರೆ.
ಅವಳಿ ನಗರ ಧಾರವಾಡದ ಹೊರವಲಯದಲ್ಲಿ ನಿರ್ಮಿಸಲಾಗಿರುವ ಪ್ರತಿಷ್ಠಿತ ಐಐಟಿ ಸಂಸ್ಥೆಯ ಉದ್ಘಾಟನಾ ಸಮಾರಂಭಕ್ಕಾಗಿ ಇಲ್ಲಿಗೆ ಆಗಮಿಸಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ತಂತ್ರಜ್ಞಾನ ಸಂಸ್ಥೆಯಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಕುರಿತು ಚರ್ಚೆ ನಡೆಸಲಾಗುತ್ತಿದೆ. ಈಗಾಗಲೇ ಆಯಾ ರಾಜ್ಯಗಳಲ್ಲಿ ಅಲ್ಲಿನ ಸ್ಥಳಿಕರಿಗೆ ಮೀಸಲಾತಿ ನೀಡಿಕೆ ಪದ್ಧತಿ ಕೆಲ ರಾಜ್ಯಗಳಲ್ಲಿ ಚಾಲ್ತಿಯಲ್ಲಿದ್ದು, ಧಾರವಾಡದಲ್ಲೂ ಮೀಸಲಾತಿ ನೀಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಇನ್ನು ಈ ವೇಳೆ ಅನಂತ್ ಕುಮಾರ್ ಜೊತೆಗಿದ್ದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ ಜಾವಡೇಕರ್ ಕೂಡ ಅನಂತ್ ಕುಮಾರ್ ಅವರ ಮಾತಿಗೆ ತಲೆಯಾಡಿಸುತ್ತಾ, ಐ.ಐ.ಟಿಯಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಿಕೆ ಬಹುತೇಕ ಖಚಿತವೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೇಂದ್ರ ಮಾನವ ಸಂಪನ್ಮೂಲ ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಧಾರವಾಡಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವುದು ಅತ್ಯಂತ ಖುಷಿ ತಂದಿದೆ. ಶಿಕ್ಷಣ ರಂಗದಲ್ಲಿ ಧಾರವಾಡ ಹೆಸರಾಗಿದ್ದು, ಐ ಐ ಟಿ ಆರಂಭ ಅದಕ್ಕೆ ಮತ್ತೊಂದು ಗರಿಯಾಗಿದೆ ಎಂದು ಹೇಳಿದರು.
ಈ ಹಿಂದೆ ಕರ್ನಾಟಕ ಸರ್ಕಾರ ಕೂಡ ಧಾರವಾಡ ಐಐಟಿಯಲ್ಲಿ ಕನ್ನಡಿಗರಿಗೆ ಶೇ.25ರಷ್ಟು ಸ್ಥಾನ ಮೀಸಲಾತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
Advertisement