ಬೆಂಗಳೂರು: ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರದಿಂದ ರು. 1 ಲಕ್ಷ ಕೋಟಿ ಹಣವನ್ನು ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ನಗರದ ಅರಮನೆ ಮೈದಾನದಲ್ಲಿ ಆರಂಭಗೊಂಡಿರುವ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಹಣವನ್ನು ವೆಚ್ಚ ಮಾಡಲಾಗುವುದು. ರಾಜ್ಯದಲ್ಲಿ 4 ಸಾವಿರ ಕಿ.ಮೀ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ನಿತ್ಯ 18 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ. ಇದನ್ನು 30 ಕಿ.ಮೀಗೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ಬಂದರುಗಳ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆರು ಬಂದರುಗಳಿದ್ದು, ಮಂಗಹಳೂರು ಬಂದರನ್ನು 10 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದ್ದಾರೆ.
ಸಂಚಾರ ದಟ್ಟಣೆಗೆ ಶಾಶ್ವತ ಯೋಜನೆ
ನಗರದಲ್ಲಿ ತಲೆದೋರಿರುವ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕೇಂದ್ರ ಈಗಾಗಲೇ ಸಿದ್ಧವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಕೊಟ್ಟರೆ ಬೃಹತ್ ಯೋಜನೆಯೊಂದನ್ನು ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
Advertisement