ತಾಂಜೇನಿಯಾ ಯುವತಿ ಥಳಿತ ಪ್ರಕರಣ: ಇನ್ಸ್ ಪೆಕ್ಟರ್ ಸೇರಿ 3 ಪೊಲೀಸರ ಅಮಾನತು, ಮತ್ತೆ 4 ಬಂಧನ

ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಸರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ...
ಎನ್.ಎಸ್.ಮೇಘರಿಕ್
ಎನ್.ಎಸ್.ಮೇಘರಿಕ್
ಬೆಂಗಳೂರು: ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
ಘಟನೆ ಸಂಬಂಧ ಇಬ್ಬರು ಪೇದೆಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಮತ್ತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ .ಎಸ್ .ಮೇಘರಿಕ್ ಅವರು ತಿಳಿಸಿದ್ದಾರೆ. ಆದರೆ ವರದಿಗಳ ಪ್ರಕಾರ, ಪೊಲೀಸ್ ಇನ್ಸ್ ಪೆಕ್ಟರ್ ಪ್ರವೀಣ್ ಬಾಬು ಹಾಗೂ ಪೇದೆಗಳಾದ ಮಂಜುನಾಥ್ ಮತ್ತು ರಾಜಶೇಖರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯ ಲೋಪ ಆರೋಪದ ಮೇಲೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಓರ್ವ ಪೇದೆ ಹಾಗೂ ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಓರ್ವ ಪೇದೆಯನ್ನು ಅಮಾನತುಗೊಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಘಟನೆ ಸಂಬಂಧ ನಿನ್ನೆ ಸೋಲದೇವನಹಳ್ಳಿ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನು ಘಟನೆ ಸಂಬಂಧ ಇಂದು ಸಂಜೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಮೇಘರಿಕ್ ಅವರು ತಿಳಿಸಿದ್ದಾರೆ.
ಭಾರತದಲ್ಲಿನ ತಾಂಜೇನಿಯಾ ಹೈಕಮಿಷನರ್‌ ಸಹಿತವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ.
ಕಳೆದ ಭಾನುವಾರ ಮದ್ಯ ಸೇವಿಸಿದ್ದ ಸೂಡಾನ್‌ ವಿದ್ಯಾರ್ಥಿ ಮೊಹಮದ್‌ ಅಹದ್‌ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಸನಾವುಲ್ಲಾ ಅವರ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಅವರ ಪತ್ನಿ ಶಬಾನಾ ತಾಜ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಜನ ಕಾರಿನಲ್ಲಿದ್ದ ತಾಂಜೇನಿಯಾದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಇದುವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com