ರಾಮದುರ್ಗ: ರಾಜ್ಯದಲ್ಲಿ ಮಹದಾಯಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದೀಗ ರೈತರ ಹೋರಾಟ ಬೆಂಬಲಿಸಿ ಬೆಳಗಾವಿ ಜಿಲ್ಲೆ ರಾಮದುರ್ಗದ ಕಾಂಗ್ರೆಸ್ ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಳಸಾ ಬಂಡೂರಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಪಟ್ಟಣ್ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ರಾಜಿನಾಮೆ ಪತ್ರ ಬರೆದು ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.
ಅಶೋಕ್ ಪಟ್ಟಣ್ ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಮದ್ಯಾಹ್ನ ತಹಸೀಲ್ದಾರ್ ಮೂಲಕ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರಿಗೆ ರವಾನಿಸಿದ್ದಾರೆ.
ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ರಾಜಿನಾಮೆ ಪತ್ರವನ್ನು ತಹಸೀಲ್ದಾರ್ ಮೂಲಕ ಸ್ಪೀಕರ್ ಗೆ ರವಾನಿಸಿರುವುದಾಗಿ ಅಶೋಕ್ ಪಟ್ಟಣ್ ಅವರು ತಿಳಿಸಿದ್ದಾರೆ.