ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಬಹಿರಂಗವಾಗಿದೆ.
ಇಂಡಿಯಾ ಟುಡೇ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ನಾಲ್ವರು ಶಾಸಕರು ರಾಜ್ಯಸಭೆಯ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ತಲಾ ಐದು ಕೋಟಿ ರುಪಾಯಿ ಡಿಮಾಂಡ್ ಮಾಡಿದ್ದಾರೆ.
ಕುಟುಕು ಕಾರ್ಯಾಚರಣೆಯಲ್ಲಿ ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್, ಆಳಂದ್ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಕಾರ್ಜುನ್ ಖೂಬಾ ಮತ ಹಾಕಲು ಐದು ಕೋಟಿ ರುಪಾಯಿ ಕೇಳುತ್ತಿರುವ ದೃಶ್ಯ ಸೆರೆಯಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವರ್ತೂರ್ ಪ್ರಕಾಶ್, ಸ್ಟಿಂಗ್ ಆಪರೇಷನ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್ ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.