ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿರೋಧಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನಲ್ಲಿ ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಇಂದು ಬೆಳಗ್ಗೆ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ಆಪ್ ಕಾರ್ಯಕರ್ತರು ಎಸಿಬಿ ರಚನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಖಂಡಿಸಿದರು. ಅಲ್ಲದೆ ಆ ಕೂದಲನ್ನು ಕೊರಿಯರ್ ಮೂಲಕ ಸಿಎಂ ಮನೆಗೆ ರವಾನಿಸುವುದಾಗಿ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಮುಖಂಡ ರವಿಕೃಷ್ಣಾ ರೆಡ್ಡಿ ಸೇರಿದಂತೆ ಹಲವು ಆಪ್ ಕಾರ್ಯಕರ್ತರು ಕೇಶಮುಂಡನ ಮಾಡಿಸಿಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ರವಿಕೃಷ್ಣಾ ರೆಡ್ಡಿ, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಗೆ ಬೇಕಿಲ್ಲ. ಅವರ ಭ್ರಷ್ಟಾಚಾರ ಹಗರಣಗಳಿಂದ ತಪ್ಪಿಸಿಕೊಲ್ಳಲು ಎಸಿಬಿ ಬೇಕಾಗಿದೆ. ಅದಕ್ಕಾಗಿಯೇ ಎಲ್ಲರೂ ಸೇರಿ ಎಸಿಬಿ ರಚಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಎಸಿಬಿ ರಚನೆಯಿಂದ ಲೋಕಾಯುಕ್ತ ದುರ್ಬಲಗೊಳ್ಳಲಿದೆ ಎಂದಿರುವ ರವಿಕೃಷ್ಣಾ ರೆಡ್ಡಿ, ಅದನ್ನು ರದ್ದು ಮಾಡುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹೇಳಿದ್ದಾರೆ.