ಬೆಂಗಳೂರು: ಮೇ 25ರೊಳಗೆ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಾಲಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮಂಗಳವಾರ ಹೇಳಿದ್ದಾರೆ.
ಪರೀಕ್ಷಾ ಫಲಿತಾಂಶ ಪ್ರಕಟಿಸುವ ಸಂಬಂಧ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ, ಈ ತಿಂಗಳು 25ರೊಳಗೆ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವ ತೀರ್ಮಾನಕ್ಕೆ ಬರಲಾಗಿದ್ದು, ಫಲಿತಾಂಶದ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಪಿಯುಸಿ ಫಲಿಕಾಂಶಕ್ಕೆ ಮುನ್ನವೇ ಪ್ರಕಟವಾಗಲಿದೆ. ಎರಡು ಪರೀಕ್ಷೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶ ಪ್ರಕಟಣೆಗೆ ಅಂತಿಮ ಪ್ರಕ್ರಿಯೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ ಪ್ರಶ್ನೆ ಪತ್ರಿಕೆ ಬಯಲು ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, 7 ವರ್ಷ ಜೈಲು ಶಿಕ್ಷೆ ವಿಧಿಸುವ ಕಾಯ್ದೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸಲಾಗುವುದು ಎಂದು ಕಿಮ್ಮನೆ ರತ್ನಾಕರ ಹೇಳಿದರು.
ಪ್ರಶ್ನೆ ಪತ್ರಿಕೆ ಬಯಲನ್ನು ಒಂದು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಿ, ಜಾಮೀನು ರಹಿತ ಪ್ರಕರಣವಾಗಿ ಪರಿವರ್ತಿಸುವ ಅಂಶವೂ ಈ ಕಾಯ್ದೆಯಲ್ಲಿದೆ. ಅಂತಿಮವಾಗಿ ವಿಧಾನಸಭೆಯಲ್ಲಿ ಚರ್ಚಿಸಿ ಈ ಕಾಯ್ದೆಗೆ ಸ್ಪಷ್ಟ ರೂಪ ನೀಡಲಾಗುವುದು ಎಂದರು.