ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದರು.
ಸಿಎಂ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇನ್ಫಿ ಸಂಸ್ಥಾಪಕ, ತಾವು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
'ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವಿಚಾರ ಹಿರಿಯರಿಗೆ ಬಿಟ್ಟಿದ್ದು, ಆ ಯಾರೂ ಕಲ್ಪಿಸಿಕೊಳ್ಳಲು ಅಥವಾ ಊಹಿಸಲು ಸಾಧ್ಯವಿಲ್ಲ' ಎಂದು ನಾರಾಯಣಮೂರ್ತಿ ಹೇಳಿದ್ದಾರೆ.
ನಾನು ಲಂಡನ್ ನಲ್ಲಿದ್ದಿದ್ದರಿಂದ ಇತ್ತೀಚಿಗೆ ರಚನೆಯಾದ ವಿಷನ್ ಗ್ರೂಪ್ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಡಿ ಶಿಕ್ಷಣ ಸಂಸ್ಥೆಯೊಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದೆ ಎಂದಿದ್ದಾರೆ.
ಸಿಎಂ ಕಚೇರಿ ಮೂಲಗಳ ಪ್ರಕಾರ, ನಾರಾಯಣಮೂರ್ತಿ ತಾವು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಮೈಸೂರಿನಲ್ಲಿ ಭೂಮಿ ಕೇಳಲು ಬಂದಿದ್ದರು ಎನ್ನಲಾಗಿದೆ.