ಇಂದಿನಿಂದ ಸಂಸತ್ ಕಲಾಪ; ನೋಟು ನಿಷೇಧವೇ ಪ್ರತಿಪಕ್ಷಗಳ ಪ್ರಮುಖ ಅಸ್ತ್ರ
ನವದೆಹಲಿ: ನೋಟು ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ಬುಧವಾರದಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದು, ಸರ್ಕಾರದ ನಿರ್ಧಾರವನ್ನು ಒಕ್ಕೋರಲಿನಿಂದ ವಿರೋಧಿಸಲು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಆರ್ ಜೆಡಿ ಹಾಗೂ ಸಮಾಜವಾದಿ ಮತ್ತು ಬಿಎಸ್ ಪಿ ಪಕ್ಷಗಳು ನಿರ್ಧರಿಸಿವೆ.
ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಇಂದು ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ರ್ಯಾಲಿ ಬಳಿಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ. ಪ್ರಮುಖ ವಿಚಾರವೆಂದರೆ ಟಿಎಂಸಿಯ ಈ ರ್ಯಾಲಿಗೆ ಕಾಂಗ್ರೆಸ್ ನ ಬೆಂಬಲವಿಲ್ಲ ಎಂದು ತಿಳಿದುಬಂದಿದೆ. ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಬದಲು ಒಂದೇ ಬಾರಿಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಶ್ನಿಸುವ ಕುರಿತು ಕಾಂಗ್ರೆಸ್ ನಾಯಕರು ನಿರ್ಧಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ ಮಾತ್ರವಲ್ಲದೇ ನೋಟು ನಿಷೇಧವನ್ನು ಪ್ರಬಲವಾಗಿ ವಿರೋಧಿಸುತ್ತಿದ್ದ ಆಮ್ ಆದ್ಮಿ ಪಕ್ಷ ಕೂಡ ಟಿಎಂಸಿ ರ್ಯಾಲಿಯಿಂದ ದೂರ ಉಳಿದಿದ್ದು, ದೆಹಲಿಯಲ್ಲಿ ತನ್ನದೇ ಆದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಣೆ ಮಾಡಿದೆ. ಇನ್ನು ಟಿಎಂಸಿಗೆ ಇತರೆ ಪ್ರತಿಪಕ್ಷಗಳಾದ ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ, ಆರ್ ಜೆಡಿ, ಎನ್ ಸಿ ಮತ್ತು ಜೆಡಿಯು ಪಕ್ಷಗಳು ಬೆಂಬಲ ಸೂಚಿಸಿವೆ.
ಲೋಕಸಭೆಯಲ್ಲಿ ರಾಹುಲ್, ರಾಜ್ಯಸಭೆಯಲ್ಲಿ ಮನಮೋಹನ್ ಸಿಂಗ್ ಗೆ ಕೈ ನೇತೃತ್ವ
ಇನ್ನು ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಹೊಣೆಗಾರಿಕೆ ನೀಡಲಾಗಿದ್ದು, ನೋಟು ರದ್ದಿತಿ ಕುರಿತಂತೆ ಕಾಂಗ್ರೆಸ್ ಪಕ್ಷದ ನಿಲುವನ್ನು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಂಡಿಸಿದರೆ, ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ನೇತೃತ್ವದ ಹೊಣೆ ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ